ಬೆಳಗಾವಿ : ರಾಜ್ಯದಲ್ಲಿ ಒಂದು ಕಡೆ ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ.ಅದಲ್ಲದೆ ರಾಜ್ಯಪಾಲರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ಆದರೂ ಕೂಡ ಸಂಪುಟದ ಎಲ್ಲಾ ಸಚಿವರು, ಶಾಸಕರುಗಳು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತು ಆತ್ಮಸ್ಥೈರ್ಯ ತುಂಬಿದ್ದಾರೆ. ಆದರೆ ಕಾಂಗ್ರೆಸ್ ಜಾರಿ ಮಾಡಿರುವ ಗೃಹಲಕ್ಷ್ಮಿ ಯೋಜನೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಅಜ್ಜಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಇನ್ನು ಎತ್ತರಕ್ಕೆ ಬೆಳೆಯಲಿ ಎಂದು ಆಶೀರ್ವದಿಸಿ ಮುತ್ತೈದೆಯರಿಗೆ ಉಡಿ ತುಂಬಿ ಹೋಳಿಗೆ ಊಟ ಹಾಕಿಸಿರುವ ಘಟನೆ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ಸುಟ್ಟಟ್ಟಿ ಗ್ರಾಮದ ವೃದ್ಧೆ ಅಕ್ಕಾತಾಯಿ ಲಂಗೋಟಿ ಗ್ರಾಮದೇವತೆಯ ದೇವಸ್ಥಾನದಲ್ಲಿ 25 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮದ ಜೊತೆಗೆ ಹೋಳಿಗೆ ಊಟವನ್ನು ಹಾಕಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳಿತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ ಹಣದಿಂದ ನಮಗೆಲ್ಲ, ಬಹಳ ಅನುಕೂಲವಾಗುತ್ತಿದೆ. ನನಗೆ 10 ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿದೆ. ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು. ಈ ಕಾರಣಕ್ಕಾಗಿ ದೇವರಲ್ಲಿ ಪ್ರಾರ್ಥಿಸಿಕೊಂಡು, ಮುತ್ತೈದೆಯರಿಗೆ ಹೋಳಿಗೆ ಊಟ ಹಾಕಿಸಿದ್ದೇನೆ ಎಂದು ಬೆಳಗಾವಿ ಜಿಲ್ಲೆಯ ಸುಟ್ಟಟ್ಟಿ ಗ್ರಾಮದ ವೃದ್ಧೆ ಅಕ್ಕಾತಾಯಿ ಲಂಗೋಟಿ ತಿಳಿಸಿದ್ದಾರೆ.