ಬೆಂಗಳೂರು:ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ಲೋಕಸಭಾ ಚುನಾವಣೆಯ ಮೊದಲನೇ ಹಂತ ಏಪ್ರಿಲ್ 26 ಶುಕ್ರವಾರದಂದು ಹಾಗೂ ಎರಡನೇ ಹಂತದ ಚುನಾವಣೆ ಮೇ 7 ಮಂಗಳವಾರದಂದು ನಡೆಯಲಿದ್ದು, ಯಾದಗಿರಿ ಜಿಲ್ಲೆಯ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಸಹ ಮೇ 7 ಮಂಗಳವಾರದಂದು ನಿಗದಿಯಾಗಿರುತ್ತದೆ. ಈ ದಿನಾಂಕಗಳಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ.135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು / ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ ಎಂದು ಈಗಾಗಲೇ ದಿನಾಂಕ:25-03-2024 ರಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿರುತ್ತದೆ. ಆದಾಗ್ಯೂ ಹಲವು ಕಾರ್ಮಿಕ ಸಂಘಟನೆಗಳು ಹಾಗೂ ಕೆಲ ಕಾರ್ಮಿಕರು ಮತದಾನದ ದಿನದಂದು ಸಂಸ್ಥೆಯವರು ವೇತನ ಸಹಿತ ರಜೆ ಘೋಷಿಸುತ್ತಿಲ್ಲವೆಂದು ದೂರುಗಳನ್ನು ಸಲ್ಲಿಸುತ್ತಿದ್ದಾರೆ. ಆದ್ದರಿಂದ ಚುನಾವಣೆಯು ನಡೆಯುವ ಕ್ಷೇತ್ರಗಳಲ್ಲಿ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version