ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಒಂದೆಡೆಯಾದರೆ ಬಿಜೆಪಿ, ಜೆಡಿಎಸ್ ಇನ್ನೊಂದೆಡೆ ಆಗಿದೆ. ಬಿಜೆಪಿಯ ಎನ್ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್ ಸೇರಿದ್ದು, ಜಂಟಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಎರಡೂ ಪಕ್ಷಗಳು ಸಜ್ಜಾಗಿವೆ. ಚುನಾವಣೆಗೆ ಇನ್ನೂ 2-3 ತಿಂಗಳು ಬಾಕಿ ಇದ್ದು, ಈಗಲೆ ಜೆಡಿಎಸ್ ಮತ್ತು ಬಿಜೆಪಿ ರಾಜ್ಯದಲ್ಲಿ ವೇದಿಕೆ ಸಜ್ಜು ಮಾಡುತ್ತಿವೆ.
28 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಮನ್ವಯ ಸಮಿತಿ ರಚಿಸಲು ನಾಯಕರು ತಯಾರಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ, ಜೆಡಿಎಸ್ನ 10ಕ್ಕೂ ನಾಯಕರನ್ನು ಸೇರಿಸಿ ಸಮನ್ವಯ ಸಮಿತಿ ರಚನೆಯಾಗಲಿದೆ.
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ರಾಜ್ಯದಲ್ಲಿ ಸಮನ್ವಯ ಸಮಿತಿ ರಚನೆಯಾಗುತ್ತಿದೆ. ಈ ಸಮಿತಿ ಮೂಲಕ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ಲ್ಯಾನ್ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರುಸಮನ್ವಯ ಸಮಿತಿ ಅಧ್ಯಕ್ಷರಾಗುವ ಸಾಧ್ಯತೆ ಇದೆ.
ನಾಯಕರ ಮಾತುಕತೆ ವೇಳೆ ಬಿಜೆಪಿ ಹೈಕಮಾಂಡ್ ಹೆಚ್ಡಿ ಕುಮಾರಸ್ವಾಮಿ ಅವರಿಗೆ ರಾಜ್ಯ ಎನ್ಡಿಎ ಸಂಚಾಲಕ ಹುದ್ದೆ ವಹಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಹೀಗಾಗಿ ಶೀಘ್ರದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಮಿತಿ ರಚನೆಯಾಗಲಿದೆ.