ಶಿವಮೊಗ್ಗ: ಪಂಚ ಗ್ಯಾರಂಟಿ ಯೋಜನೆಗಳಿಂದ ಶಿವಮೊಗ್ಗ ಜಿಲ್ಲೆಗೆ 3023.95 ಕೋಟಿ ರೂ.ಹಣವನ್ನು ಕಾಂಗ್ರೆಸ್ ಸರ್ಕಾರ ವೆಚ್ಚ ಮಾಡುವ ಮುಖಾಂತರ ಜಿಲ್ಲೆಯ ಜನತೆಗೆ ಬದುಕಿನ ಗ್ಯಾರಂಟಿಯನ್ನು ನೀಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣ ವ್ಯಯಿಸಿದೆ. ಇದರಿಂದ ರಾಜ್ಯದ ತಲಾದಾಯ ಕೂಡ ಹೆಚ್ಚಲು ಸಹಕಾರಿಯಾಯಿತು ಎಂದರು.
2013-14ರಲ್ಲಿ ರಾಜ್ಯದ ತಲಾದಾಯ 1,05,000 ರೂ.ಗಳಷ್ಟಿತ್ತು. ಕಳೆದ ಮೂರು ತಿಂಗಳ ಹಿಂದೆ ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ರಾಜ್ಯದ ತಲಾದಾಯ 2,04,485 ರೂ.ಗಳಿಗೆ ಏರಿಕೆಯಾಗಿದೆ. ಇದಕ್ಕೆ ಗ್ಯಾರಂಟಿಗಳೇ ಪ್ರಮುಖ ಕಾರಣ. ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಭರವಸೆ, ಭದ್ರತೆ ಮತ್ತು ಗೌರವವನ್ನು ತರಲು ನೆರವಾಗಿವೆ. ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಇದು ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ದಿನನಿತ್ಯದ ಬದುಕಿಗೆ ನೇರ ಸ್ಪರ್ಶ ನೀಡಿವೆ. 1,24,10,685 ಮಹಿಳೆಯರಿಗೆ ಪ್ರತಿ ತಿಂಗಳು 2500 ಕೋಟಿ ರೂ. ಹಣವನ್ನು ನೇರವಾಗಿ ಅವರ ಖಾತೆಗೆ ಹಾಕಲಾಗುತ್ತಿದೆ. ಇದುವರೆಗೆ ಗೃಹಲಕ್ಷ್ಮಿ ಯೋಜನೆಯಡಿ 57,381 ಕೋಟಿ ರೂ. ಹಣವನ್ನು ಸರ್ಕಾರ ಪಾವತಿಸುವ ಮೂಲಕ ಪ್ರತಿ ಮಹಿಳೆಗೆ 48 ಸಾವಿರ ಗೃಹಲಕ್ಷ್ಮಿ ಹಣ ತಲುಪಿದೆ ಎಂದು ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಯಡಿ 21,500 ಕೋಟಿ, ಅನ್ನಭಾಗ್ಯ ಯೋಜನೆಯಡಿ 18 ಸಾವಿರ ಕೋಟಿ ರೂ., ಯುವನಿಧಿ ಯೋಜನೆಯಡಿ 800 ಕೋಟಿ ರೂ.ಹಣವನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 656 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು ಇದರ ಟಿಕೆಟ್ ಮೌಲ್ಯ 17 ಸಾವಿರ ಕೋಟಿ ರೂ.ಗಳನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಭರಿಸಿದೆ. ದರ ಏರಿಕೆ, ಉದ್ಯೋಗ ಅಸ್ಥಿರತೆ ಮತ್ತು ಆದಾಯ ಅಸಮಾನತೆಗಳ ನಡುವೆ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಈ ಯೋಜನೆಗಳು ಆರ್ಥಿಕ ಭರವಸೆಯಾಗಿ ಪರಿಣಮಿಸಿವೆ ಎಂದರು.
ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಹಾವಳಿ ಹೆಚ್ಚಾಗಿದ್ದು ಸರ್ಕಾರಿ ಬಸ್ ಗಳು ಸಕಾಲಕ್ಕೆ ಬರುತ್ತಿಲ್ಲ. ಇದರಿಂದ ಶಕ್ತಿ ಯೋಜನೆಗೆ ಹಿನ್ನಡೆಯಾಗಿದೆ ಎಂಬ ಮಾತುಗಳು ಕೇಳಿಬಂದಿದೆ. ಅಧಿಕಾರಿಗಳು ಕೂಡಲೇ ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಡಿಫೋಗಳ ಸ್ಥಾಪನೆ ಸಂಬಂಧ ಮಂತ್ರಿಗಳೊಂದಿಗೆ ಚರ್ಚಿಸಲಾಗುವುದು
ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಮಾತನಾಡಿ, ಬಸ್ ಗಳ ಓಡಾಟದಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸೊರಬ, ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಬಸ್ ಗಳು ಸಕಾಲದಲ್ಲಿ ಸಂಚರಿಸುತ್ತಿಲ್ಲ ಎಂಬ ದೂರುಗಳು ವ್ಯಕ್ತವಾಗುತ್ತಿವೆ. ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು, ಸಮಿತಿ ಸಭೆಗೆ ಅಧಿಕಾರಿಗಳು ತಪ್ಪದೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಮನೆ ಬಳಕೆಗೆ ಮಾತ್ರ ವಿದ್ಯುತ್ ಬಳಕೆ ಮಾಡಬೇಕು. ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಂಡುಬಂದರೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜಪ್ಪ,ಶಿವಣ್ಣ, ಇಕ್ಕೇರಿ ರಮೇಶ್, ಹಾಗೂ ಜಿಲ್ಲಾ, ತಾಲೂಕು ಮಟ್ಟದ ಸದಸ್ಯರು ಉಪಸ್ಥಿತರಿದ್ದರು.
ಗ್ಯಾರಂಟಿಗಳ ಜಿಲ್ಲಾ ಚಿತ್ರಣ
ಗೃಹಲಕ್ಷ್ಮಿ ಯೋಜನೆಯಡಿ 3,88,029 ಮನೆಯ ಯಜಮಾನಿಯರ ಬ್ಯಾಂಕ್ ಖಾತೆಗೆ 1805.56 ಕೋಟಿ ರೂ. ಹಣವನ್ನು ಜಮೆ ಮಾಡಲಾಗಿದೆ. ಪ್ರತಿ ಫಲಾನುಭವಿಗಳಿಗೆ ತಲಾ 2000ದಂತೆ ಒಟ್ಟು 48 ಸಾವಿರ ರೂ.ಗಳನ್ನು ಸರ್ಕಾರದ ನೀಡಿದೆ. ಈ ಯೋಜನೆಯಡಿ ನೋಂದಾಯಿತರಲ್ಲಿ 4717 ಮಂದಿ ಮೃತಪಟ್ಟಿದ್ದಾರೆ.
ಗೃಹಜ್ಯೋತಿ ಯೋಜನೆಯಡಿ 4,82,276 ಕುಟುಂಬಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗಿದೆ. ಇದಕ್ಕಾಗಿ 588.44 ಕೋಟಿ ಹಣ ವೆಚ್ಚವಾಗಿದ್ದು ಇದನ್ನು ರಾಜ್ಯ ಸರ್ಕಾರ ವಿದ್ಯುತ್ ನಿಗಮ ಕಂಪನಿಗೆ ಪಾವತಿಸಿದೆ.
ಅನ್ನಭಾಗ್ಯ ಯೋಜನೆಯಡಿ 3,76,954 ಕಾರ್ಡ್ ಗಳು ನೋಂದಣಿಯಾಗಿದ್ದು 2,23,13,229 ಸದಸ್ಯರು ಫಲಾನುಭವಿಗಳಿದ್ದಾರೆ. ಅವರಿಗೆ ಉಚಿತ ಪಡಿತರ ವಿತರಣೆ ಮಾಡಲಾಗುತ್ತಿದ್ದು 360.55 ಕೋಟಿ ರೂ. ಹಣವನ್ನು ಸರ್ಕಾರ ವ್ಯಯಿಸಿದೆ.
ಶಕ್ತಿ ಯೋಜನೆಯಡಿ 6,50,07,631 ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಇದರ ಟಿಕೆಟ್ ಮೌಲ್ಯ 244.98 ಕೋಟಿ ರೂ.ಹಣವನ್ನು ಸಾರಿಗೆ ನಿಗಮಕ್ಕೆ ಪಾವತಿ ಮಾಡಲಾಗಿದೆ. ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ 64.1% ಹೆಚ್ಚಳವಾಗಿದೆ. ಪ್ರಯಾಣಿಕರ ಅವಶ್ಯಕತೆಗೆ ಅನುಗುಣವಾಗಿ 50 ಬಸ್ ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗಿದೆ.
ಒಟ್ಟು ಪ್ರಯಾಣಿಕರಲ್ಲಿ 20.10% ಮಹಿಳೆಯರು ಉದ್ಯೋಗ ನಿಮಿತ್ತ ಸಂಚರಿಸಿದರೆ, 28.58% ಹೆಣ್ಣುಮಕ್ಕಳು ಶಾಲಾ ಕಾಲೇಜುಗಳಿಗೆ ಶಾಲೆ ಕಾಲೇಜುಗಳಿಗೆ, 10.75% ಮಂದಿ ಧಾರ್ಮಿಕ ಕ್ಷೇತ್ರಗಳಿಗೆ 5.15% ಮಹಿಳೆಯರು ಪ್ರವಾಸಿ ತಾಣಗಳಿಗೆ ಪ್ರಯಾಣಿಸಿದ್ದಾರೆ.
ಯುವನಿಧಿ ಯೋಜನೆಯಡಿ ನೋಂದಾಯಿತ 8233 ಯುವಕ ಯುವತಿಯರಿಗೆ, 24.41 ಕೋಟಿ ರೂ.ನಷ್ಟು ನಿರುದ್ಯೋಗ ಭತ್ಯೆ ನೀಡಲಾಗಿದೆ.








