ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮಹಿಳಾ ಸಬಲೀಕರಣ, ಶಿಕ್ಷಣ ಮತ್ತು ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬೆನ್ನಲ್ಲೇ, ಈ ಬಾರಿಯೂ ಬಜೆಟ್ನಲ್ಲಿ ಜನಸಾಮಾನ್ಯರ ಹಿತರಕ್ಷಣೆಗೆ ಆದ್ಯತೆ ನೀಡಲಾಗಿದ್ದು, ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಶಕ್ತಿ ತುಂಬಿರುವ ‘ಗೃಹಲಕ್ಷ್ಮಿ’ ಯೋಜನೆಗೆ ಈ ವರ್ಷ ಬರೋಬ್ಬರಿ 28,608 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. “ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ. ಹೆಚ್ಚು ಹಾಲು ಕೊಡುವ ಹಸುಗಳನ್ನು ಹೇಗೆ ಚೆನ್ನಾಗಿ ಆರೈಕೆ ಮಾಡುತ್ತೇವೆಯೋ, ಹಾಗೆಯೇ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ನಮ್ಮ ರಾಜ್ಯವನ್ನು ಒಕ್ಕೂಟ ಸರ್ಕಾರವೂ ಸಂವೇದನಾಶೀಲತೆಯಿಂದ ನೋಡಬೇಕು,” ಎಂದು ಸಿಎಂ ಮಾರ್ಮಿಕವಾಗಿ ನುಡಿದರು.
ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಹೊಸ ರೂಪ
ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ.
ಶ್ರಮಿಕ ಶಾಲೆಗಳು: ಕಾರ್ಮಿಕರ ಮಕ್ಕಳಿಗಾಗಿ ಹೊಸದಾಗಿ 62 ವಸತಿ ಶ್ರಮಿಕ ಶಾಲೆಗಳನ್ನು ಆರಂಭಿಸಲಾಗುವುದು. ಒಟ್ಟಾರೆಯಾಗಿ 104 ಶಾಲೆಗಳ ಆರಂಭಕ್ಕೆ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ.
GTTC ಕೇಂದ್ರಗಳು: 60 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ 10 GTTC (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ) ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಕೌಶಲ್ಯ ಅಕಾಡೆಮಿ: ಹುಬ್ಬಳ್ಳಿ-ಧಾರವಾಡದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆಯಾಗಲಿದೆ.
ಪ್ಯಾರಾ ಮೆಡಿಕಲ್ ಕೋರ್ಸ್: ಮೈಸೂರು, ದೊಡ್ಡಬಳ್ಳಾಪುರ, ಇಂದಿರಾನಗರ ಮತ್ತು ಹುಬ್ಬಳ್ಳಿಯ ಕಾರ್ಮಿಕರ ವಿಮಾ ಸೊಸೈಟಿಗಳ ಮೂಲಕ ಪ್ಯಾರಾ ಮೆಡಿಕಲ್ ಕೋರ್ಸ್ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಪ್ರವಾಸೋದ್ಯಮಕ್ಕೆ ಬೂಸ್ಟ್: ಮುಳ್ಳಯ್ಯನಗಿರಿಯಲ್ಲಿ ರೋಪ್ವೇ
ಪ್ರವಾಸಿಗರ ಆಕರ್ಷಣೀಯ ಕೇಂದ್ರವಾದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ – ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ವೇ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಇದನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (PPP Model) ಅಭಿವೃದ್ಧಿಪಡಿಸಲಾಗುವುದು. ಇದರಿಂದ ಮಲೆನಾಡಿನ ಪ್ರವಾಸೋದ್ಯಮಕ್ಕೆ ಹೊಸ ಕಳೆ ಬರಲಿದೆ.
ಸಾಹಿತ್ಯ ಮತ್ತು ಸಂಸ್ಕೃತಿ
ಖ್ಯಾತ ಸಾಹಿತಿ ಯು.ಆರ್. ಅನಂತಮೂರ್ತಿ ಅವರ ನೆನಪಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಯು.ಆರ್. ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಿಸಿದರು.
ಆದಾಯ ಗುರಿ ಮತ್ತು ರಾಜ್ಯದ ಸಾಲದ ಸ್ಥಿತಿ
ಬಜೆಟ್ ಮಂಡನೆ ವೇಳೆ ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆಯೂ ಮಾಹಿತಿ ನೀಡಿದ ಸಿಎಂ, ವಿವಿಧ ಇಲಾಖೆಗಳಿಗೆ ಕಟ್ಟುನಿಟ್ಟಿನ ರಾಜಸ್ವ ಗುರಿ ನೀಡಿದ್ದಾರೆ:
ಅಬಕಾರಿ ಇಲಾಖೆ: 45,000 ಕೋಟಿ ರೂ.
ನೊಂದಣಿ ಮತ್ತು ಮುದ್ರಾಂಕ: 29,000 ಕೋಟಿ ರೂ.
ಸಾರಿಗೆ ಇಲಾಖೆ: 15,500 ಕೋಟಿ ರೂ.
ಗಣಿಗಾರಿಕೆ: 11,000 ಕೋಟಿ ರೂ. (ಶುಲ್ಕ ಅಂದಾಜು)
ಇದೇ ವೇಳೆ ಕರ್ನಾಟಕದ ಒಟ್ಟು ಸಾಲ 8,24,389 ಕೋಟಿ ರೂ. ಇದೆ ಎಂದು ಸಿಎಂ ಮಾಹಿತಿ ನೀಡಿದರು. ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.






