ಮಂಡ್ಯ : ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ಕೆ ಸಂಬಂಧಿಸಿದಂತೆ ಇದೀಗ ರಾಜ್ಯಾದ್ಯಂತ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಜೆಡಿಎಸ್ ಪಕ್ಷಗಳು ತೀವ್ರವಾದ ವಿರೋಧ ವ್ಯಕ್ತಪಡಿಸುತ್ತಿದ್ದು, ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದೆ.
ಹನುಮಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ಕರೆ ಕೊಟ್ಟಿದೆ. ಬಿಜೆಪಿ ಹೋರಾಟಕ್ಕೆ ಜೆಡಿಎಸ್ ನಾಯಕರೂ ಸಾಥ್ ನೀಡಿದ್ದಾರೆ. ಮಂಡ್ಯದಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೆರಗೋಡು ಗ್ರಾಮದಿಂದ ಪಾದಯಾತ್ರೆ ಆರಂಭವಾಗಲಿದೆ.
ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾಷದಯಾತ್ರೆಗೆ ಚಾಲನೆ ನೀಡಲಾಗುತ್ತದೆ. 15ಕಿ.ಮೀ ಸಾಗಲಿರುವ ಪಾದಯಾತ್ರೆ ಹುಲಿವಾನ, ಸಾತನೂರು, ಚಿಕ್ಕಮಂಡ್ಯ ಮಾರ್ಗವಾಗಿ ಮಂಡ್ಯದ ಶ್ರೀಕಾಳಿಕಾಂಭ ದೇವಾಲಯ ಪ್ರವೇಶಿಸಲಿದೆ. ಅಲ್ಲಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಿ ಹನುಮ ಧ್ವಜ ಪುನರ್ ಸ್ಥಾಪನೆಗೆ ಆಗ್ರಹಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಪಿ, ಎಎಸ್ಪಿ, ಇನ್ಸ್ಪೆಕ್ಟರ್ಗಳು ಸೇರಿ 400ಕ್ಕೂ ಹೆಚ್ಚು ಪೊಲೀಸರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.