ಮಂಡ್ಯ: ದಕ್ಷಿಣ ಭಾರತದ ರಾಜ್ಯಗಳನ್ನೊಳಗೊಂಡ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದ ಪಶ್ಚಿಮ ಠಾಣೆಯಲ್ಲಿ ದೂರು ಸಲ್ಲಿಸಿದರು.
ದೇಶದ ಅಖಂಡತೆ ಮತ್ತು ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿರುವ ಸಂಸದರು ಪ್ರತ್ಯೇಕತಾವಾದಗಳಿಗೆ ಕುಮ್ಮಕ್ಕು ನೀಡುವ ಹೇಳಿಕೆ ನೀಡಿದ್ದಾರೆ. ಇದರಿಂದ ದೇಶ ಪ್ರೇಮಿಗಳಿಗೆ ತೀವ್ರ ನೋವಾಗಿದೆ. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ಕಾರ್ಯಕರ್ತರಾದ ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ಹೊಸಹಳ್ಳಿ ಶಿವು, ಆನಂದ್, ನಂದೀಶ್, ಶಿವಲಿಂಗಯ್ಯ, ಪ್ರಸನ್ನಕುಮಾರ್, ಯೋಗಿ ದೂರು ನೀಡಿದ್ದಾರೆ.