ಬೆಂಗಳೂರು: 12-02-2024 ರಿಂದ 23-02-2024 ರವರೆಗೆ ವಿಧಾನಸೌಧದಲ್ಲಿ ನಡೆಯಲಿರುವ ಜಂಟಿ ಅಧಿವೇಶನದ ಪ್ರಯುಕ್ತ ನಿಷೇಧಾಜ್ಞೆ ಜಾರಿ ಮಾಡುವ ಬಗ್ಗೆ ನಗರ ಪೊಲೀಸ್ ಆಯುಕ್ತರು ಆದೇಶವನ್ನ ಹೊರಡಿಸಿದ್ದಾರೆ.
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ 12-02-2024 ರಿಂದ 23-02-2024 ರವರೆಗೆ ವಿಧಾನಸೌಧದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ, ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತವೆ. ಇದರಿಂದ ಅಧಿವೇಶನದ ಕಾರ್ಯ- ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯುಂಟಾಗುವ ಸಾಧ್ಯತೆಗಳು ಇರುವುದಾಗಿ ಗುಪ್ತವಾರ್ತಾ ಮಾಹಿತಿಯಿಂದ ತಿಳಿದುಬಂದಿರುತ್ತದೆ.
ಈ ನಿಟ್ಟಿನಲ್ಲಿ ನಾನು ಮೇಲ್ಕಂಡ ಮಾಹಿತಿಗಳ ಬಗ್ಗೆ ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾಗಿ ಸಂಗ್ರಹಿಸಿದ ಮಾಹಿತಿಯಿಂದ ಹಾಗೂ ಗುಪ್ತವಾರ್ತಾ ವಿಭಾಗದ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆಯೆಂದು ತಿಳಿದುಬಂದಿರುತ್ತದೆ. ಆದ್ದರಿಂದ ವಿಶೇಷ ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕೆಳಕಂಡಂತೆ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿರುತ್ತೇನೆ.
ಆದೇಶ ಸಂಖ್ಯೆ: ಸಿ.ಎಸ್.ಬಿ.(ಕ್ಷೇತ್ರ) ನಿಷೇಧಾಜ್ಞೆ/03/2024, ದಿನಾಂಕ: 09-02-2024
ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ನನಗೆ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೇ ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ ಬಿ. ದಯಾನಂದ, ಭಾ.ಮೊ.ಸೇ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು ದಿನಾಂಕ: 12-02-2024 ರಿಂದ ದಿನಾಂಕ: 23-02-2024 ರವರೆಗೆ ಪ್ರತಿದಿನ ಬೆಳಿಗ್ಗೆ 06-00 ಗಂಟೆಯಿಂದ ಮಧ್ಯರಾತ್ರಿ 12-00 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂಪಾರ್ಕ್ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಿರುತ್ತೇನೆ.1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಿದೆ.
2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.
3. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
4. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಅಂತ ತಿಳಿಸಿದ್ದಾರೆ.