ಬೆಂಗಳೂರು: ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಯತ್ನ ನಡೆಯುತ್ತಿದ್ದು, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ, ಕಾರ್ಯಕ್ರಮಗಳನ್ನು ಚುನಾವಣಾ ಪ್ರಣಾಳಿಕೆ ಒಳಗೊಂಡಿರಲಿದೆ ಎಂದು ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಸದಸ್ಯರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕ್ಯಾಪಿಟಲ್ ಹೋಟೆಲ್ನಲ್ಲಿ ಶನಿವಾರ ನಡೆದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂಥ ವಾಗ್ದಾನಗಳನ್ನು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ ಎಂದರು.
ದೇಶದ ಅಭಿವೃದ್ಧಿ, ಜಾರಿಯಾಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಜಾರಿ ಆದವು ಎಂದರು.