ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಸಭಾಂಗಣದಲ್ಲಿ 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೇ ಅವರು ಮಾತನಾಡುತ್ತ ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ. ಅವರು ಕೂಡ ಕೋಲೆಬಸವನ ಹಾಗೆ ತಲೆ ಅಲ್ಲಾಡಿಸದೇ ಕೇಂದ್ರದವರನ್ನು ಕೇಳಬೇಕಿತ್ತು. ಕೋಲಾರ ಸಂಸದ ಮುನಿಸ್ವಾಮಿಯವರು ಅವರು ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ?
ಅವರು ಸಂಸದರಾಗಲು ಲಾಯಕ್ಕೇ ಎಂದರು. ಕೇಂದ್ರ ಸರ್ಕಾರದಿಂದ ನ್ಯಾಯಯುತವಾದದ್ದು ಕೇಳಲು ಇವರಿಗೆ ಸಾಧ್ಯವಿಲ್ಲ ಎಂದರೇ ಏನು ಸೂಚಿಸುತ್ತದೆ. ನಾನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ , ಕೇಂದ್ರದ ಅನುದಾನವನ್ನು ಪಡೆಯಿರಿ ಎಂದು ಒತ್ತಾಯಿಸಿದ್ದೆ. 15 ನೇ ಹಣಕಾಸು ಆಯೋಗದವರು ವಿಶೇಷ ಅನುದಾನ 5495 ಕೋಟಿ ರೂ ವಿಶೇಷ ಅನುದಾನ ಪಡೆಯಲು ಹೇಳಿದ್ದೆ. ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ ಕೊಟ್ಟಿದ್ದಾರೆ. ಅದನ್ನು ಪಡೆಯಿರಿ ಎಂದು ಹೇಳಿದ್ದೆ. ಒಟ್ಟು 11495 ಕೋಟಿ ರೂ. ಶಿಫಾರಸ್ಸು ಮಾಡಿರುವುದನ್ನು ಒತ್ತಾಯ ಮಾಡಿ ಎಂದು ಅವರಿಗೆ ಒತ್ತಾಯಿಸಿದ್ದೆ. ಕನ್ನಡಿಗರಿಗೆ ಅನ್ಯಾಯವಾದರೂ ಸುಮ್ಮನಿರಬೇಕೇ? ಭದ್ರಾ ಮೇಲ್ದಂಡೆಗೆ 2023-24 ಕೇಂದ್ರ ಬಜೆಟ್ ನಲ್ಲಿ 5300 ಕೋಟಿ ಕೊಡುತ್ತೇವೆ ಎಂದಿದ್ದರು. ಅದನ್ನೇ ಇಲ್ಲಿನ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ ನರೇಂದ್ರ ಮೋದಿಗೆ ಧನ್ಯವಾದಗಳನ್ನು ಅರ್ಪಿಸಿದ್ದರು. ರಾಷ್ಟ್ರೀಯ ಯೋಜನೆಯಾಗಲಿದೆ ಎಂದು ಹೇಳಿದವರು ಇವರೇ ಆದರೆ ಇನ್ನೂ ಆಗಿಲ್ಲವೆಂದರೆ ಅವರಿಗೆ ಕೋಪ ಏಕೆ? ಇದು ಕನ್ನಡ ಜನರಿಗೆ ಮಾಡುತ್ತಿರುವ ದ್ರೋಹ. ಇದು ಪ್ರಜಾಪ್ರಭುತ್ವದ ವಿರೋಧವಲ್ಲವೇ ? ಎಂದು ಪ್ರಶ್ನಿಸಿದರು.