ಬೆಂಗಳೂರು : ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 71 ತಾಲೂಕು ಆಸ್ಪತ್ರೆ ಮತ್ತು 15 ಜಿಲ್ಲಾಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.
ಜಿಲ್ಲಾಸ್ಪತ್ರೆಗಳ 65 ಹೃದಯ ತಜ್ಞರು ಆನ್ಲೈನ್ ಸಂಪರ್ಕದಲ್ಲಿದ್ದು ರೋಗಿಯ ಆರೋಗ್ಯ ಮತ್ತು ಜೀವ ರಕ್ಷಣೆಗೆ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ. ಜೊತೆಗೆ ಅಗತ್ಯವೆನಿಸಿದರೆ ₹30 ಸಾವಿರ ಮೊತ್ತದ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತದೆ. ಮುಂದಿನ ವರ್ಷ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಈ ಯೋಜನೆ ವಿಸ್ತರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹೃದಯಾಘಾತವಾದಾಗ ತುರ್ತಾಗಿ ಚಿಕಿತ್ಸೆ ನೀಡಲು ʼಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೃದಯಜ್ಯೋತಿʼ ಯೋಜನೆ ಜಾರಿಗೊಳಿಸಲಾಗಿದೆ. ಹೃದಯಾಘಾತವಾದಾಗ ಸುವರ್ಣ ಅವಧಿಯಲ್ಲಿ (ಗೋಲ್ಡನ್ ಹವರ್) ಚಿಕಿತ್ಸೆ ನೀಡಿ ಜೀವ ಉಳಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.