ಕೋಲಾರ : ಇದೆ ಏಪ್ರಿಲ್ 17ರಂದು ಕೋಲಾರ ಜಿಲ್ಲೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. 17ರಂದು ಮಧ್ಯಾಹ್ನ 3 ಗಂಟೆಗೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣಗೆ ರಾಹುಲ್ ಗಾಂಧಿ ಬರಲಿದ್ದಾರೆ. ರಾಹುಲ್ ಗಾಂಧಿ ಅವರು ಭಾಗಿಯಾಗುವ ಸಮಾವೇಶದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ತಿಳಿಸಿದರು.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಭಾಗಿಯಾಗುವ ಸಮಾವೇಶದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.ಆದರೆ ಈ ಸಂದರ್ಭದಲ್ಲಿ ಯಾವುದೇ ರೋಡ್ ಶೋ ಇರುವುದಿಲ್ಲ.ವೇದಿಕೆ ಕಾರ್ಯಕ್ರಮ ಮಾತ್ರ ಇರುತ್ತದೆ. ಈ ಒಂದು ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ನಗರ ಅಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.
ರಾಜ್ಯದಲ್ಲಿ ಒಕ್ಕಲಿಗ ದಂಗಲ್ ಕುರಿತು ಬೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು ಕುರುಬರು ದಲಿತರು ಮುಸ್ಲಿಂ ಸೇರಿದಂತೆ ನಮ್ಮದು ಜಾತ್ಯತೀತ ಪಕ್ಷ ಎಂದು ಕೋಲಾರದಲ್ಲಿ ನಗರ ಅಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಉತ್ತಮ ಆಡಳಿತವನ್ನು ನೀಡುತ್ತಿದ್ದೇವೆ, ಒಕ್ಕಲಿಗ ಸಮುದಾಯದ ಹಲವರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಿದೆ ಎಲ್ಲಾ ಜಾತಿಯವರು ನಮ್ಮ ಜೊತೆಯಲ್ಲಿದ್ದಾರೆ. ಚುನಾವಣೆ ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ.ನಿರ್ಮಲಾನಂದ ಸ್ವಾಮೀಜಿಗಳು ಯಾವುದೇ ಪಕ್ಷಕ್ಕೆ ಸೇರಿದವರಲ್ಲ ನಾವು ಮಠಕ್ಕೆ ಭೇಟಿ ನೀಡಿ ಯಾವುದೇ ಪ್ರಚಾರ ತೆಗೆದುಕೊಂಡಿಲ್ಲ. ಮಠ ಎಲ್ಲರಿಗೂ ಸೇರಿದ್ದು ಎಲ್ಲರಿಗೂ ಆಶೀರ್ವಾದ ಮಾಡುತ್ತಾರೆ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದರು.