ಮಂಡ್ಯ : 2024-25 ರ ಬಜೆಟ್ ನಲ್ಲೇ ಮುಂದಿನ ವರ್ಷಕ್ಕೆ ಬೇಕಿರುವ 52 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ-2 ಜನಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ಗ್ಯಾರಂಟಿಗಳು ತಾತ್ಕಾಲಿಕ, ಬಿಜೆಪಿಯದ್ದು ಶಾಶ್ವತ ಎಂದು ಹೇಳಿದ್ದಾರೆ. 2024-25 ರ ಬಜೆಟ್ ನಲ್ಲೇ ಮುಂದಿನ ವರ್ಷಕ್ಕೆ ಬೇಕಿರುವ 52 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದರು.
ವಿ.ಸಿ ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಜ್ಞರ ಸಮಿತಿ ರಚಿಸಲಾಗಿದೆ. ವರದಿ ಬಂದ ಕೂಡಲೇ ವಿವಿ ಸ್ಥಾಪನೆ ಆರಂಭಿಸಲಾಗುವುದು. ಕೆ.ಆರ್.ಎಸ್ ಉದ್ಯಾನವನವನ್ನು ವಿಶ್ವ ದರ್ಜೆಗೇರಿಸಲು ಪ್ರಯತ್ನ ಮಾಡಲಾಗುವುದು. ವಿಶ್ವೇಶ್ವರಯ್ಯ ನಾಲೆ ಆಧುನೀಕರಣಕ್ಕೆ ಪ್ರಯತ್ನ ಮಾಡಲಾಗುವುದು. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಅವಧಿಯಲ್ಲಿ ನೀರಾವರಿ , ಲೋಕೋಪಯೋಗಿ, ಕೆರೆ ತುಂಬಿಸುವ ಕೆಲಸಕ್ಕೆ ಅನುದಾನ ಒದಗಿಸಲಾಗಿದೆ ಹಾಗೂ ಮುಂದಿನ ದಿನಗಳಲ್ಲಿ ನಾಗಮಂಗಲ ಶಾಖೆ ಎನ್.ಬಿ.ಸಿ ನಾಲೆ ಅಭಿವೃದ್ಧಿಯನ್ನೂ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ದೇಶ ಕಂಡ ಸರ್ವಶ್ರೇಷ್ಠ ಆರ್ಥಿಕ ತಜ್ಞ. ಅವರು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಉದ್ಯೋಗ ಹಕ್ಕುಗಳನ್ನು ಜಾರಿಗೆ ತರುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಮೂಲಭೂತ ಹಕ್ಕುಗಳನ್ನಾಗಿಸಿದರು. ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸಿನ ಸಚಿವರಾಗಿದ್ದ ಅವರು ದೇಶವನ್ನು ಆರ್ಥಿಕವಾಗಿ ಸದೃಢವಾಗಿಸಿದರು ಎಂದು ಹೇಳಿದರು.
ಮೋದಿ ಅವರ ಶಿಫಾರಸ್ಸಿನ ಮೇರೆಗೆ ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿತು. ಯಾರೂ ಬೇಕಾದರೂ ರೈತರ ಜಮೀನು ಕೊಂಡು, ರೈತರು ಭಿಕಾರಿಗಳಾಗುವಂತೆ ಮಾಡಿದರು. ಗ್ಯಾರಂಟಿಗಳನ್ನು ಟೀಕಿಸುವ ದೇವೇಗೌಡರು, ಕುಮಾರಸ್ವಾಮಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರದಲ್ಲಿ ನಿಲ್ಲಲು ಧೈರ್ಯ ಸಾಲದೆ ಮಂಡ್ಯಕ್ಕೆ ಬಂದಿದ್ದಾರೆ. ಇಲ್ಲಿ ಸೋಲಿಸಿ ಮನೆಗೆ ಕಳಿಸಿ ಎಂದು ಹೇಳಿದರು.
ಮಂಡ್ಯ ಶುಗರ್ ಕಾರ್ಖಾನೆಯನ್ನು ಬಂದ ಬಿಜೆಪಿ ಕಾಲದಲ್ಲಿ ಮುಚ್ಚಿದರು. ನಾವು ಅಧಿಕಾರಕ್ಕೆ ಬಂದ 20 ದಿನಗಳಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ಅದನ್ನು ಪುನರಾರಂಭ ಮಾಡಿದ್ದೇವೆ. ಇದರೊಂದಿಗೆ ಮತ್ತೊಂದು ಕಾರ್ಖಾನೆಯನ್ನು ತೆರೆಯುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದೇವೆ ಎಂದರು.