ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗ ಮತಗಳು ಬಿಜೆಪಿ-ಜೆಡಿಎಸ್ ಮೈತ್ರಿಯತ್ತ ವಾಲಿವೆ ಎಂಬ ಆತಂಕದ ಮಧ್ಯೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಸಂಜೆ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಕಾಂಗ್ರೆಸ್ ನ ಒಕ್ಕಲಿಗ ಶಾಸಕರು ಮತ್ತು ಲೋಕಸಭಾ ಅಭ್ಯರ್ಥಿಗಳು ಭಾಗವಹಿಸಿದ್ದರು. ಸ್ವತಃ ಕಾಂಗ್ರೆಸ್ ನ ಒಕ್ಕಲಿಗ ಐಕಾನ್ ಆಗಿರುವ ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಭೆ ಆಯೋಜಿಸಿದ್ದರು.
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಳೆದುಕೊಂಡಿದ್ದ ಜೆಡಿಎಸ್ಗೆ ಮೈತ್ರಿ ಹೇಗೆ ಕೆಲಸ ಮಾಡಿದೆ ಎಂದು ನಾಯಕರು ಚರ್ಚಿಸಿದರು. ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳಲ್ಲಿ ಕಾಂಗ್ರೆಸ್ ಗೆ ಹೊಡೆತ ಬಿದ್ದಿದೆ ಎಂಬ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಮುಖ್ಯವಾಗಿ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಡೆದ ಒಕ್ಕಲಿಗ ಮತಗಳು ಮತ್ತೆ ಜೆಡಿಎಸ್ ಗೆ ಹೋಗಿವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ಒಕ್ಕಲಿಗ ಮತಗಳನ್ನು ಮರಳಿ ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟರು.
ರಾಜ್ಯದ ಜನಸಂಖ್ಯೆಯ ಶೇಕಡಾ 16 ರಷ್ಟಿದ್ದಾರೆ ಎಂದು ಹೇಳಿಕೊಳ್ಳುವ ಒಕ್ಕಲಿಗರನ್ನು ಪ್ರಬಲ ಸಮುದಾಯವಾಗಿ ಮತ್ತು ಚುನಾವಣೆಯ ಸಮಯದಲ್ಲಿ ನಿರ್ಣಾಯಕ ಸಮುದಾಯವೆಂದು ನೋಡಲಾಗುತ್ತದೆ.
ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ, ಶಿವಕುಮಾರ್ ಅವರು ಲೋಕಸಭಾ ಚುನಾವಣೆಗೆ ಒಕ್ಕಲಿಗ ಮತದಾರರ ಬಗ್ಗೆ ನಂಬಿಕೆ ಹೊಂದಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಂಟು ಒಕ್ಕಲಿಗರಿಗೆ ಟಿಕೆಟ್ ನೀಡಿದೆ ಎಂಬ ಅಂಶವನ್ನು ಅವರು ಪದೇ ಪದೇ ಒತ್ತಿ ಹೇಳಿದರು