ಬೆಂಗಳೂರು: ಘನತ್ಯಾಜ್ಯ ನಿರ್ವಹಣಾ ಕಂಪನಿಯ ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ವಿರುದ್ಧ ಆಂತರಿಕ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆ (ಯುಡಿಡಿ) ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದೆ.
ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಘನತ್ಯಾಜ್ಯ ನಿರ್ವಹಣೆಯಡಿ ಕಬಾಡೆ ಅವರು ಕೈಗೊಂಡ ಕಾಮಗಾರಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಸಾರ್ವಜನಿಕ ದೂರುಗಳನ್ನು ಉಲ್ಲೇಖಿಸಿ ನಗರಾಭಿವೃದ್ಧಿ ಸಚಿವ ಮತ್ತು ಹೆಬ್ಬಾಳ ಶಾಸಕ ಬೈರತಿ ಸುರೇಶ್ ಅವರು ಪತ್ರ ಬರೆದ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.
ಹೆಬ್ಬಾಳ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ನಿರ್ವಹಿಸುವಾಗ ಬಸವರಾಜ ಕಬಾಡೆ ವಿರುದ್ಧ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದಿವೆ. ಈ ಕಾಮಗಾರಿಗಳು ಬಿಎಸ್ಡಬ್ಲ್ಯೂಎಂಎಲ್ ಕೈಗೊಂಡ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿವೆ” ಎಂದು ಸುರೇಶ್ ಯುಡಿಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಫೆಬ್ರವರಿ 26ರ ಪತ್ರದಲ್ಲಿ ಕಾಮಗಾರಿಯ ನಿಖರ ಸ್ವರೂಪವನ್ನು ನಿರ್ದಿಷ್ಟಪಡಿಸದಿದ್ದರೂ, ಇದು ಮನೆ ಮನೆ ತ್ಯಾಜ್ಯ ಸಂಗ್ರಹ ಮತ್ತು ಸಾಗಣೆಗೆ ಸಂಬಂಧಿಸಿದೆ ಎಂದು ಶಂಕಿಸಲಾಗಿದೆ.
ಬಿಬಿಎಂಪಿ ಎಂಜಿನಿಯರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಚಿವರು ಒತ್ತಾಯಿಸಿದ್ದಾರೆ.
ಪತ್ರ ಬರೆದ ಸುಮಾರು ಮೂರು ತಿಂಗಳ ನಂತರ, ಯುಡಿಡಿ ತನಿಖೆ ನಡೆಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿದೆ.