ಬೆಂಗಳೂರು : ಬೆಂಗಳೂರಿನಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಡೆಲಿವರಿ ಬಾಯ್ ಹೇಮಂತ್ ಕುಮಾರ್ ಶವ ಜ್ಞಾನಭಾರತಿ ಗೇಟ್ ಬಳಿ ಪತ್ತೆಯಾಗಿದೆ.
ಮೈಸೂರು ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಡೆಲಿವರಿ ಬಾಯ್ ಒಬ್ಬರು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದರು. ಮೃತ ಯುವಕನನ್ನು ಬ್ಯಾಟರಾಯನಪುರದ ಹೇಮಂತ್ ಕುಮಾರ್(28) ಎಂದು ಗುರುತಿಸಲಾಗಿದ್ದು, ಸದ್ಯ ಮೃತ ಯುವಕನ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶವವನ್ನು ಮೇಲೆತ್ತಿದ್ದಾರೆ.
ಪೋರ್ಟರ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಹೇಮಂತ್ಕುಮಾರ್ ಅವರು, ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮೈಸೂರು ರಸ್ತೆಯ ಜ್ಞಾನಭಾರತಿ ಕಡೆಯಿಂದ ಬ್ಯಾಟರಾಯನಪುರದ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿ ರಾಜಕಾಲುವೆಗೆ ಬಿದ್ದಿದ್ದರು. ಇದೀಗ ಅಗ್ನಿಶಾಮಕ ಸಿಬ್ಬಂದಿ ಶವ ಪತ್ತೆಹಚ್ಚಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.