ಬೆಂಗಳೂರು: ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಡೆಂಗ್ಯೂ ಹರಡುತ್ತಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಕೊಂಡು ವಿಚಾರಣೆ ನಡೆಸಿತು.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರನ್ನೊಳಗೊಂಡ ನ್ಯಾಯಪೀಠವು 2024ರ ಜುಲೈ 9ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ಸಂಪಾದಕರಿಗೆ ಬರೆದ ಪತ್ರ ಹಾಗೂ ಇತರ ಪೂರಕ ಸುದ್ದಿಗಳನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಎಂದು ಪರಿಗಣಿಸಿ ಈ ಆದೇಶ ನೀಡಿದೆ.
ಡೆಂಗ್ಯೂ ಹರಡುವುದನ್ನು ತಡೆಯಲು ಕೈಗೊಂಡ ಮುಂಜಾಗ್ರತಾ ಮತ್ತು ಪರಿಹಾರ ಕ್ರಮಗಳು ಮತ್ತು ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕೈಗೊಂಡ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ನ್ಯಾಯಪೀಠ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡಿದೆ.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸೊಳ್ಳೆ ಸಂತಾನೋತ್ಪತ್ತಿಯನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ವಿವರಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.