ಬೆಳಗಾವಿ : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಖ್ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಶೀಘ್ರವೇ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಾಗಿ ಶಾಸಕ ರಾಜು ಕಾಗೆ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದಾಗಿ ಕರ್ನಾಟಕ ಸಾರಿಗೆ ನಿಗಮ ನಷ್ಟದಲ್ಲಿದೆ. ಡೀಸೆಲ್, ಬಸ್ ಗಳ ಬಿಡಿಭಾಗಗಳ ಬೆಲೆಯೂ ಹೆಚ್ಚಳವಾಗಿದೆ. ಕಳೆದ ಹತ್ತು ವರ್ಷಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಹೀಗಾಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು 2020ರಲ್ಲಿ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ KSRTC ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿಲ್ಲ. ನಿಗಮಕ್ಕೆ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರದಿಂದ 1100 ಕೋಟಿ ಬರಬೇಕಿದೆ. ಸಾರಿಗೆ ನಿಗಮಗಳಿಂದ ದರ ಪರಿಷ್ಕರಣೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.