ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಂತಹ ಅಕ್ರಮದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ನಾಯಕರು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತ್ರತ್ವದಲ್ಲಿ ನಾಳೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಆದರೆ ಇನ್ನೊಂದು ಕಡೆ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಪ್ರತ್ಯೇಕ ಪಾದಾಯಾತ್ರೆ ಮಾಡಲು ನಿರ್ಧರಿಸಿದ್ದು ಅಚ್ಚರಿಗೆ ಕಾರಣವಾಗಿದೆ.
ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಂತಹ ಅಕ್ರಮದ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ರಾಜ್ಯ ಬಿಜೆಪಿ ನಾಯಕರು ನಾಳೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ ಸ್ವಪಕ್ಷದಲ್ಲೇ ಅಸಮಾಧಾನ ಮುಗಿಲದಿದ್ದು ಇದೀಗ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಸವನಗೌಡ ಪಾಟೀಲ ಅವರು ಪ್ರತ್ಯೇಕ ಪಾದಯಾತ್ರೆಗೆ ಮುಂದಾಗಿದ್ದಾರೆ.
ಗೋಕಾಕ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಮುಡಾ ಹಗರಣಕ್ಕಿಂತ ವಾಲ್ಮೀಕಿ ನಿಗಮದ ಹಗರಣ ದೊಡ್ಡದು. ವಾಲ್ಮೀಕಿ ನಿಗಮದ ಹಗರಣ, ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದನ್ನು ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಸಿದ್ಧರಿದ್ದೇವೆ. ಪಾದಯಾತ್ರೆ ಬಗ್ಗೆ ಹೈಕಮಾಂಡ್ನಿಂದ ಅನುಮತಿ ಕೇಳಿದ್ದೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ವಾಲ್ಮೀಕಿ ಸಮುದಾಯಕ್ಕೆ ರಾಜ್ಯ ಸರ್ಕಾರ ಮೋಸ ಮಾಡಿದೆ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದರೇ ನಾನು, ಬಸನಗೌಡ ಪಾಟೀಲ್ ಯತ್ನಾಳ್ ಪಾದಯಾತ್ರೆ ಮಾಡಲು ಸಿದ್ದರಿದ್ದೇವೆ. ಸದನದಲ್ಲಿ ಗಲಾಟೆ ಮಾಡಿದರೆ ಸಾಲಲ್ಲ, ಪಾದಯಾತ್ರೆ ಮಾಡಬೇಕು. ಬಳ್ಳಾರಿ ಪಾದಯಾತ್ರೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಪಾದಯಾತ್ರೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಜೊತೆ ಮಾತನಾಡಲ್ಲ. ನಾನೇನಿದ್ದರೂ ಹೈಕಮಾಂಡ್ ಜೊತೆ ಮಾತನಾಡ್ತೇನೆ. ಪಾದಯಾತ್ರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಒಪ್ಪಿಲ್ಲ, ಒಪ್ಪುವುದೂ ಇಲ್ಲ ಎಂದು ಕಿಡಿ ಕಾರಿದರು.