ಬೆಳಗಾವಿ : ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ 135 ಶಾಸಕರಿದ್ದು, ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಮುಂದುವರೆಯಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇದ್ದಾರೆ ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಮುಖ್ಯಮಂತ್ರಿ ಬದಲಾವಣೆ ಮಾಡುವುದು ಬಿಡುವುದು ಏನೇ ಇದ್ದರೂ ಕೂಡ ಅದು ಕಾಂಗ್ರೆಸ್ ಹೈಕಮಾಂಡಿಗೆ ಬಿಟ್ಟಿರುವ ವಿಚಾರ ಎಂದು ತಿಳಿಸಿದರು.
ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಸಲು ಕಾಂಗ್ರೆಸನವರೇ ದಾಖಲೆ ನೀಡುತ್ತಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಕ್ಕೆ, ನಾವು ಕಾಂಗ್ರೆಸ್ನವರು, ಅವರು ಬಿಜೆಪಿಯವರು. ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಅವರು ಆಯ್ಕೆ ಮಾಡುತ್ತಾರೆ ಎಂದರೆ, ಸೂರ್ಯ ಪೂರ್ವದಿಂದ ಪಶ್ಚಿಮ ದಿಕ್ಕಿನಲ್ಲಿ ಹುಟ್ಟುತ್ತಾನೆ ಏನೋ ಎನ್ನುವ ಭಾವನೆ ಬರುತ್ತಿದೆ ಎಂದರು.
ಯತ್ನಾಳ್ ಅವರು ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಲು 2 ಸಾವಿರ ಕೋಟಿ, ಸಚಿವರಾಗಲು 500 ಕೋಟಿ ಹಣ ಅವರ ಹೈಕಮಾಂಡ್ಗೆ ಕೊಡಬೇಕು ಎಂದು ಹೇಳಿದ್ದರು. ಆದರೆ, ಅವರು ಎಲ್ಲಿಂದ ಈ ವಿಷಯ ಸಂಗ್ರಹಿಸುತ್ತಾರೆ. ಯಾಕೆ ಹೀಗೆ ಮಾತನಾಡುತ್ತಾರೆ ಎನ್ನುವುದೇ ವಿಚಿತ್ರ. ಇದಕ್ಕೆ ಯತ್ನಾಳ್ ಅವರೇ ಉತ್ತರಿಸುವುದು ಸೂಕ್ತ ಎಂದರು.