ಮೈಸೂರು: ಮೂಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ? ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಇಂದು ಮೈಸೂರಿನಲ್ಲಿ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು. ಆ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪರಿಣಾಮ ಅವರು ಪರಿಹಾರ ಅರ್ಜಿ ಹಾಕಿದರು. ನನ್ನಂತಹವನಾಗಿದ್ದರೆ ಶೇ.100ರಷ್ಟು ಪರಿಹಾರ ನೀಡಿ ಎಂದು ಹೋರಾಟ ಮಾಡುತ್ತಿದ್ದೆ. ಆದರೆ ಪಾರ್ವತಿ ಅವರು ಮುಡಾದವರು 50:50 ಅನುಪಾತದಲ್ಲಿ ಪರಿಹಾರ ಪಡೆಯಲು ಒಪ್ಪಿದರು. ಅವರು ಪರಿಹಾರದ ಅರ್ಜಿ ಹಾಕುವಾಗ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಕೇಳಿಲ್ಲ. ಮೂಡಾದವರು ತಮ್ಮ ತಪ್ಪಿನ ಅರಿವಾಗಿ ಒಂದು ನಿರ್ಣಯಕ್ಕೆ ಬಂದು ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರು ನನ್ನ ಪತ್ನಿಗೆ ನಿವೇಶನ ನೀಡಿ ಎಂದು ಒತ್ತಡ ಹಾಕಿದ್ದಾರಾ? ಆದೇಶ ಮಾಡಿದ್ದಾರಾ? ಅಧಿಕಾರ ದುರುಪಯೋಗ ಮಾಡಿದ್ದಾರಾ? ಇಲ್ಲ. ಆದರೂ ಇದನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಏಕೆ ಅಕ್ರಮ ಎಂದು ಕರೆಯುತ್ತಿದ್ದಾರೆ ಎಂದು ಕಿಡಿಕಾರಿದರು.
ಇದು ತಪ್ಪಾಗಿದ್ದರೆ, ಈ ನಿವೇಶನಗಳನ್ನು ಯಾರ ಕಾಲದಲ್ಲಿ ಕೊಟ್ಟರು? ಬಿಜೆಪಿ ಸರ್ಕಾರದಲ್ಲಿ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಪರಿಹಾರ ನಿವೇಶನ ನೀಡಲಾಗಿದೆಯೇ ಹೊರತು, ಸಿದ್ದರಾಮಯ್ಯ ಹಾಗೂ ಭೈರತಿ ಸುರೇಶ್ ಅವರು ಅಧಿಕಾರದಲ್ಲಿ ಇದ್ದಾಗ ಆಗಿರುವುದಲ್ಲ. ಬಿಜೆಪಿ ನಾಯಕರ ತಟ್ಟೆಯಲ್ಲಿ ಹೆಗ್ಗಣಗಳಿವೆ. ಸಿದ್ದರಾಮಯ್ಯ ಅವರು ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ 25 ಹಗರಣಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಬೋವಿ ನಿಗಮ, ಬಿಟ್ ಕಾಯಿನ್, ಯಡಿಯೂರಪ್ಪ ಹಗರಣ, ಪಿಎಸ್ ಐ ನೇಮಕಾತಿ ಹಗರಣ ಸೇರಿದಂತೆ ಅನೇಕ ಹಗರಣಗಳಿವೆ ಎಂದು ಗುಡುಗಿದರು.
ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತೇವೆ. ರಾಜ್ಯದ ಜನ ಅವರ ಪರವಾಗಿದ್ದಾರೆ.ನೀವು ಅವರನ್ನು ಏನೂ ಮಾಡಲು ಸಾಧ್ಯವಿಲ್ಲ. ನಾವು ನುಡಿದಂತೆ ನಡೆದು ಐದು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಮುಂದೆಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ಹಳೆ ಯೋಜನೆಗಳನ್ನು ಹೇಗೆ ತೆಗೆದುಹೊಕಲು ಸಾಧ್ಯವಾಗಿಲ್ಲವೋ, ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ತೆಗೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿ ಅವರು ಎಂದೂ ಅಧಿಕಾರ ದುರ್ಬಳಕೆ ಮಾಡಿಕೊಂಡವರಲ್ಲ. ದೇವಾಲಯಕ್ಕೆ ಹೋದರೂ ಸರದಿ ಸಾಲಿನಲ್ಲಿ ನಿಂತವರು. ನಮ್ಮ ಕುಟುಂಬದವರು ನಮ್ಮ ಜತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಧರ್ಮಪತ್ನಿ ಎಂದಿಗೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗಲೂ ಅವರು ಕಾಣಿಸಿಕೊಳ್ಳಲಿಲ್ಲ. ಅಂತಹ ಹೆಣ್ಣಿನ ಬಗ್ಗೆ ಅಧಿಕಾರ ದುರುಪಯೋಗದ ಆರೋಪ ಮಾಡುತ್ತೀರಲ್ಲಾ ಇದು ಸಾಧ್ಯವಿಲ್ಲ. ನಿಮ್ಮ ಈ ಪಾಪವನ್ನು ಮುಖ್ಯಮಂತ್ರಿಗಳು ಹಾಗೂ ಪಾರ್ವತಿ ಅವರು ಕ್ಷಮಿಸಿದರೂ ಬೆಟ್ಟದ ಮೇಲಿರುವ ತಾಯಿ ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ ಎಂದರು.
ಆ.9ರಂದು ಐತಿಹಾಸಿಕ ಯಾತ್ರೆಗಳು:
1942ರಲ್ಲಿ ಈ ದಿನ ಆಗಸ್ಟ್ 9ರಂದು ಮಹಾತ್ಮಾ ಗಾಂಧಿ ಅವರ ನಾಯಕತ್ವದಲ್ಲಿ ಬ್ರಿಟಿಷರ ವಿರುದ್ಧ ಭಾರತ ಬಿಟ್ಟು ತೊಲಗಿ ಎಂಬ ಹೋರಾಟ ನಡೆದಿತ್ತು. 2010ರಲ್ಲಿ ಇದೇ ದಿನ ಬಳ್ಳಾರಿ ಪಾದಯಾತ್ರೆ ಮಾಡಿ ದೇಶದ ಸಂಪತ್ತು ಲೂಟಿ ಹೊಡೆಯುತ್ತಿರುವ ಬಳ್ಳಾರಿ ಗಣಿಲೂಟಿಕೋರರ ವಿರುದ್ಧ ಹೋರಾಟ ಮಾಡಿದ್ದೆವು. ಪ್ರಸ್ತುತ ನಾವು ಸಂವಿಧಾನ ವಿರೋಧಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಮಾಡುತ್ತಿರುವುದು ಪಾದಯಾತ್ರೆಯಲ್ಲ ಪಾಪ ವಿಮೋಚನಾ ಯಾತ್ರೆ. ನಮ್ಮದು ಅಧರ್ಮಿಗಳ ವಿರುದ್ಧದ ಧರ್ಮ ಯುದ್ಧ. ಅನ್ಯಾಯದ ವಿರುದ್ಧ ನ್ಯಾಯದ ಯುದ್ಧ, ನಮ್ಮದು ಅಸತ್ಯದ ವಿರುದ್ಧ ಸತ್ಯದ ಯುದ್ಧ ಎಂದು ಹೇಳಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನ ಅಧಿಕಾರಕ್ಕೆ ಬಂದಂತೆ. ಈ ಜನಾಂದೋಲನ ಕಾರ್ಯಕ್ರಮ ರಾಜ್ಯದ ಜನರ ರಕ್ಷಣೆ, ಸಂವಿಧಾನ ರಕ್ಷಣೆಗಾಗಿ. ನಿಮ್ಮ ಆಶೀರ್ವಾದದಿಂದ 135 ಸೀಟುಗಳಿಂದ ಆಯ್ಕೆಯಾಗಿರುವ ಈ ಸರ್ಕಾರವನ್ನು 10 ತಿಂಗಳಲ್ಲಿ ತೆಗೆಯುತ್ತೇವೆ ಎಂದು ಹುನ್ನಾರ ಮಾಡುತ್ತಿರುವವರ ವಿರುದ್ಧ ಹಾಗೂ ಐದು ಗ್ಯಾರಂಟಿ ಯೋಜನೆ ಹಾಗೂ ಜನರ ಬದುಕು ರಕ್ಷಣೆ ಮಾಡಲು ಈ ಹೋರಾಟ ಎಂದು ತಿಳಿಸಿದರು.
ಇತಿಹಾಸ ಗೊತ್ತಿಲ್ಲದೇ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಇನ್ನು ಇಂದಿರಾ ಗಾಂಧಿ ಅವರು, “ಅವಕಾಶ ನಿಮ್ಮನ್ನು ಹುಡುಕಿಕೊಂಡು ಬರುವುದಿಲ್ಲ, ನೀವೇ ಅವಕಾಶ ಹುಡುಕಿಕೊಂಡು ಹೋಗಬೇಕು” ಎಂದು ಹೇಳಿದ್ದಾರೆ. ನಿಮ್ಮ ಪಾಪದಯಾತ್ರೆ ಮೂಲಕ ನಮ್ಮ ಹಾಗೂ ಪಕ್ಷದ ಬಲವರ್ಧನೆಗೆ ಅವಕಾಶ ಮಾಡಿರುವುದಕ್ಕೆ ಧನ್ಯವಾದ ತಿಳಿಸುತ್ತೇವೆ.
ಗಾಂಧಿ ಅವರು ಸ್ವಾತಂತ್ರ್ಯಕ್ಕಾಗಿ ದಂಡಿ ಯಾತ್ರೆ ಮಾಡಿದರು. ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು ಗಣಿ ಲೂಟಿ ಖಂಡಿಸಿ ರಾಜ್ಯ ಹಾಗೂ ದೇಶದ ಸಂಪತ್ತು ರಕ್ಷಣೆಗೆ ಬಳ್ಳಾರಿ ಪಾದಯಾತ್ರೆ ಮಾಡಿದೆವು. ಕಾವೇರಿ ಜಲಾನಯನದ 10 ಜಿಲ್ಲೆಗಳಿಗೆ ನೀರು ಒದಗಿಸುವ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದೆವು. ನಮ್ಮ ಯಾತ್ರೆಗೆ ನೀವು ತಡೆ ಒಡ್ಡಿದಿರಿ, ಕೇಸು ದಾಖಲಿಸಿದಿರಿ. ನಿಮ್ಮ ಕೇಸಿಗೆ ನಾವು ಹೆದರಲಿಲ್ಲ. ಈ ನಾಡಿನ ರೈತರು, ನೀರಿನ ರಕ್ಷಣೆಗೆ ಹೋರಾಟ ಮಾಡಿ ಹೆಜ್ಜೆ ಹಾಕಿದ್ದೇವೆ. ಆದರೆ ನಿಮ್ಮ ಯಾತ್ರೆ ಯಾವ ಕಾರಣಕ್ಕೆ? ಎಂದು ಪ್ರಶ್ನಿಸಿದರು.