ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾಥಾವತ್ ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಾಣೆಕ್ ಷಾ ಮೈದಾನದಲ್ಲಿ 78 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾಥಾವತ್ ಮುಂದುವರೆಯಲಿದೆ ಎಂದು ಹೇಳುವ ಮೂಲಕ ಪರಿಷ್ಕರಣೆ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ ನಾವು 36 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಈ ವರ್ಷ ಈ ಯೋಜನೆಗಳಿಗೆ 52 ಸಾವಿರ ಕೋಟಿ ರೂಪಾಯಿ ನಿಗದಿಪಡಿಸಿದ್ದೇವೆ. ಕರ್ನಾಟಕದ ಈ ಯೋಜನೆ ದೇಶಕ್ಕೆ ಮಾದರಿ ಎಂದರೆ ಖಂಡಿತಾ ಅತಿಶಯೋಕ್ತಿಯಾಗಲಾರದು.
ಕಳೆದ ವರ್ಷ ಅನಾವೃಷ್ಟಿಯಿಂದಾಗಿ ನಮ್ಮ ರೈತರು ಸಂಕಷ್ಟ ಎದುರಿಸಬೇಕಾಯಿತು. ಕೇಂದ್ರ ಸರ್ಕಾರ ನೆರವು ನೀಡದಿದ್ದರೂ, ರೈತರ ನೆರವಿಗೆ ನಾವು ಕೈಜೋಡಿಸಿದ್ದೇವೆ. ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ ಒಟ್ಟಾರೆಯಾಗಿ 3454.22 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ವಿತರಿಸಲಾಗಿದೆ.
ಪ್ರಸ್ತುತ ಅತಿ ಮಳೆಯಿಂದಾಗಿ ತೊಂದರೆಗೊಳಗಾದ ಜನತೆಯ ನೆರವಿಗೆ ಸರ್ಕಾರ ಧಾವಿಸಿದೆ. ಅತಿವೃಷ್ಟಿಯಿಂದ ಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 1 ಲಕ್ಷ 20 ಸಾವಿರ ರೂಪಾಯಿ ಪರಿಹಾರ ಒದಗಿಸುವುದರೊಂದಿಗೆ ಮನೆಯನ್ನು ನಿರ್ಮಿಸಿ ಕೊಡಲು ನಾವು ನಿರ್ಧರಿಸಿದ್ದೇವೆ.
ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಚೇತೋಹಾರಿಯಾಗಿದ್ದರೆ, ಆರ್ಥಿಕ ಅಭಿವೃದ್ಧಿಯೆಡೆಗಿನ ನಮ್ಮ ಕಾರ್ಯಕ್ರಮಗಳು, ಪ್ರಯತ್ನಗಳು ಸ್ಥಿರತೆ ತರುವ ಸಾಧನಗಳಾಗಿವೆ.
ನಮ್ಮ ರಾಜ್ಯ ಹೂಡಿಕೆದಾರರ ನೆಚ್ಚಿನ ತಾಣವಾಗಿದ್ದು, 2023-24 ನೇ ಸಾಲಿನಲ್ಲಿ 54,427 ಕೋಟಿ ರೂಪಾಯಿ ವಿದೇಶಿ ಬಂಡವಾಳ ಹೂಡಿಕೆ ಆರ್ಕಷಿಸುವುದರೊಂದಿಗೆ ದೇಶದಲ್ಲಿ 3ನೇ ಸ್ಥಾನದಲ್ಲಿದೆ.
ಪ್ರಸ್ತುತ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ಸಂಸ್ಥೆಗಳೊಂದಿಗೆ 42,915 ಕೋಟಿ ರೂಪಾಯಿ ಹೂಡಿಕೆಗೆ 13 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ 22,600 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ರಾಜ್ಯದ ವಾಣಿಜ್ಯ ವಹಿವಾಟು ಕ್ಷೇತ್ರ ಅತ್ಯಂತ ಬಲಿಷ್ಠವಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯವು 1,66,545 ಮಿಲಿಯನ್ ಯುಎಸ್ ಡಾಲರ್ ಮೊತ್ತದ ರಫ್ತು ಮಾಡಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ.
ರಾಜ್ಯದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಈ ಬಾರಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಎತ್ತಿನ ಹೊಳೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಈವರೆಗೆ 855.02 ಕೋಟಿ ರೂಪಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರಡಿ 151.16 ಕೋಟಿ ರೂಪಾಯಿ ವೆಚ್ಚ ಭರಿಸಲಾಗಿದೆ.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಪಿ.ಎಂ.ಜಿ.ಎಸ್.ವೈ, ನಮ್ಮ ಗ್ರಾಮ ನಮ್ಮ ರಸ್ತೆ ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳಡಿ ಒಟ್ಟು 803 ಕಿಮೀ ಉದ್ದದ ರಸ್ತೆಯನ್ನು 463.11 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಶೋಷಿತರ ಅಭಿವೃದ್ಧಿ ನಮ್ಮ ಬದ್ಧತೆ. ಸ್ವಾತಂತ್ರ್ಯದ ಫಲವನ್ನು ಸಮಾಜದ ಕಟ್ಟಕಡೆಯ ಪ್ರಜೆಗೂ ತಲುಪಿಸುವುದು ನಮ್ಮ ಕನಸು. ಈ ನಿಟ್ಟಿನಲ್ಲಿ ಸರ್ಕಾರ ಯೋಜನಾಬದ್ಧವಾಗಿ ಹೆಜ್ಜೆ ಇರಿಸುತ್ತಿದೆ.
ದುರ್ಬಲ ಹಾಗೂ ಶೋಷಿತ ಸಮುದಾಯಗಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಸತಿ ಶಾಲೆಗಳು, ಹಾಸ್ಟೆಲುಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ನಮ್ಮ ಗುರಿ ಸ್ಪಷ್ಟವಾಗಿದೆ. ಬುದ್ಧ, ಬಸವಾದಿ ಶರಣರು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ನಾರಾಯಣ ಗುರು, ಸಾವಿತ್ರಿ ಬಾಯಿ ಪುಲೆಯಂತಹ ಮಹಾನರು, ದಾರ್ಶನಿಕರು ತೋರಿಸಿ ಕೊಟ್ಟ ಮಾನವೀಯತೆಯ ಹಾದಿಯಲ್ಲಿ ಮುನ್ನಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.