ಬೆಂಗಳೂರು : ಗ್ರಾಮೀಣ ಭಾಗದಲ್ಲಿನ ಆಸ್ಪತ್ರೆಗಳಲ್ಲಿ ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ, ಪಿಎಚ್ಒ ಹಾಗೂ ಎಚ್ಎಒ ಹುದ್ದೆಗಳು ಶೇ.40ರಷ್ಟು ಖಾಲಿ ಇವೆ. ಇದರಿಂದಾಗಿ ಜನರಿಗೆ ತೊಂದರೆಯಾಗುತ್ತಿದ್ದು, ಸಿಬ್ಬಂದಿ ನೇಮಕಕ್ಕೆ ಅನುಮತಿ ನೀಡುವಂತೆ ಹಣಕಾಸು ಇಲಾಖೆಯನ್ನು ಕೋರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.
ಕೋಲಾರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೈದ್ಯರು, ದಾದಿಯರು ಹಾಗೂ ಆಡಳಿತ ವರ್ಗ ಸೇರಿದಂತೆ ಸುಮಾರು ಶೇ.40 ರಷ್ಟು ಹುದ್ದೆಗಳು ಖಾಲಿ ಇವೆ. ಈ ಕಾರಣದಿಂದಾಗಿ ರಾಜ್ಯದ ಜನರಿಗೆ ಸಾಕಷ್ಟು ತೊಂದರೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಅನುಮತಿ ನೀಡುವಂತೆ ಹಣಕಾಸು ಇಲಾಖೆಗೆ ಕೋರಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಅಲ್ಲದೆ ಮುಂದಿನ 2 ವರ್ಷಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನ ಭರ್ತಿ ಮಾಡುವ ಭರವಸೆ ನೀಡಿದ್ದಾರೆ.ಸದ್ಯ ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಆಡಳಿತಾತ್ಮಕ ಹುದ್ದೆಗಳಲ್ಲಿರುವಂತಹ ತಜ್ಞರ ವೈದ್ಯರನ್ನು ಮರಳಿ ಅದೇ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗುತ್ತಿದ್ದು, ಶೀಘ್ರವೇ ರಾಜ್ಯದಲ್ಲಿ ಖಾಲಿಯಿರುವ ಡಿಎಚ್ಒ ಹಾಗೂ ಡಿಎಸ್ ಹುದ್ದೆಗಳಿಗೆ ಉನ್ನತ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.