ಬೆಂಗಳೂರು : ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಟೂನ್ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗ ರಾಜ್ಯಪಾಲರು, ಮೋದಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರನ್ನೊಳಗೊಂಡ ವ್ಯಂಗ್ಯ ಚಿತ್ರ ಪ್ರಕಟಿಸಿದ್ದಾರೆ. ಗೊಂಬೆ ಆಡ್ಸೋನು ಮೇಲೆ ಕುಂತವ್ನು ಎಂದು ಟಾಂಗ್ ಕೊಟ್ಟಿದ್ದಾರೆ. ಈ ವ್ಯಂಗ್ಯ ಚಿತ್ರದಲ್ಲಿ ಮೋದಿ ರಾಜ್ಯಪಾಲರ ತಲೆಮೇಲೆ ಕೂತು ಗೊಂಬೆ ಆಡಿಸುವವರಂತೆ ಚಿತ್ರಿಸಲಾಗಿದೆ. ಇನ್ನೊಂದೆಡೆ ಕುಮಾರಸ್ವಾಮಿಯವರು ಹಗರಣಗಳ ಫೈಲ್ ಗಳ ಮೇಲೆ ನಿಂತಿರುವಂತೆ ಬಿಂಬಿಸಲಾಗಿದೆ.
ಇನ್ನು ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ, ಒಬ್ಬ ಪೊಲೀಸ್ ಕಾನ್ಸ್ಟೆಬಲ್ ಸಾಕು ಎಂದು ಹೇಳಿದ್ದಾರೆ.
ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕೆ ಆಗಲ್ಲ ಎಂಬ ಕುಮಾರಸ್ವಾಮಿಯವರ ಮಾತು ಹಾಸ್ಯಾಸ್ಪದವಾಗಿದೆ. ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಹೊರತು ನನ್ನದಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಎಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೋ ಎಂಬ ಭಯದಲ್ಲಿ ಮಾಧ್ಯಮಗಳನ್ನು ಕರೆದು ಮಾತಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲೀ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಮುಖ್ಯಮಂತ್ರಿ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು, ಆದರೆ ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು ಅವುಗಳನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.