ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತರ ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ 2 ಕೆಎಸ್ ಆರ್ ಪಿ ತುಕಡಿ ಹಾಗೂ ಒಂದು ಬಿಎಂಟಿಸಿ ಬಸ್ ನಿಯೋಜಿಸಲಾಗಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ –ಪ್ರತಿವಾದ ಮಂಡಿಸಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದಾರೆ. ಈ ಮೂಲಕ ಮುಡಾ ಹಗರಣದ ಸಿಎಂ ಭವಿಷ್ಯ ಇಂದು ನಿರ್ಧಾರವಾಗಲಿದೆ.