ಮಂಡ್ಯ : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಹೈಕೋರ್ಟ್ ತೀರ್ಪು ‘ಪೋಲಿಟಿಕಲ್ ಜಡ್ಜ್ ಮೆಂಟ್’ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆಯಿಂದ ನ್ಯಾಯಾಂಗ ನಿಂದನೆಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖುಬಾ ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರು ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಮುಡಾ ಹಗರಣ ಪ್ರಕರಣದಲ್ಲಿ ಹೈಕೋರ್ಟ್ ರಾಜ್ಯಪಾಲರ ನಿರ್ಧಾರ ಎತ್ತಿಹಿಡಿದು ತನಿಖೆಗೆ ಆದೇಶಿಸಿದೆ. ಸಂವಿಧಾನಕ್ಕೆ ಅಪಮಾನ ಮಾಡಿದರೆ ಸಹಿಸಲ್ಲ, ನ್ಯಾಯಾಲಯದ ಬಗ್ಗೆ ಮಾತನಾಡುವಾಗ ಜಮೀರ್ ಗೆ ಮಾತಿನ ಮೇಲೆ ನಿಗಾ ಇರಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಮಾನ ಮಾಡಿದರೆ ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ನ್ಯಾಯಾಂಗ ವ್ಯವಸ್ಥೆಯ ತೀರ್ಪು ಅಂತಿಮವಾದ್ದದ್ದು. ಅದರ ವಿರುದ್ಧ ಹೇಳಿಕೆ ನೀಡುವುದು, ತೀರ್ಪಿನ ಕುರಿತು ಬಹಿರಂಗವಾಗಿ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತದೆ. ಒಂದು ವೇಳೆ ತೀರ್ಪು ನಿಮಗೆ ಸಮಂಜಸವಾಗದಿದ್ದಲ್ಲಿ, ಸಮಾಧಾನ ತರದಿದ್ದಲ್ಲಿ ನೀವು ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಅದನ್ನು ಹೊರತುಪಡಿಸಿ ಹೀಗೆ ತೀರ್ಪಿನ ಮೇಲೆ ಅನುಮಾನ ರೀತಿಯ ಮಾತನಾಡಿದರೆ ಅದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಕಿಡಿಕಾರಿದರು.
ಇನ್ನು ಈ ನೆಲದ ಕಾನೂನಿನ ಮೇಲೆ ನಿಮಗೆ ಗೌರವವಿದ್ದರೆ ನಿಮ್ಮ ಭಂಡತನವನ್ನು ಬಿಟ್ಟು ತಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಿ. ನೀವು ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸದೃಢವಾಗಿ ಬಲಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರಾದ್ಯಂತ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹೀಗಾಗಿ ನನಗೆ 10 ಜಿಲ್ಲೆಗಳ ಪರಿಶೀಲನಾ ಮೇಲುಸ್ತುವಾರಿಯನ್ನು ನೀಡಲಾಗಿದ್ದು, ಪ್ರಥಮವಾಗಿ ಮದ್ದೂರಿನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಕನಿಷ್ಠ 4 ಲಕ್ಷ ಸದಸ್ಯತ್ವದ ಗುರಿಯನ್ನು ಹೊಂದಲಾಗಿದ್ದು, ಹೀಗಾಗಿ ನಮ್ಮ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಮತ್ತಷ್ಟು ಸದಸ್ಯತ್ವಕ್ಕೆ ಸೇರ್ಪಡೆ ಮಾಡಬೇಕೆಂದು ತಿಳಿಸಿದರು.
ಇದೇ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮನ್ ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಮುಖಂಡರಾದ ವಿವೇಕ್, ಎಂ.ಸಿ.ಸಿದ್ದು, ಕೆಂಪುಬೋರಯ್ಯ, ಮಧು, ಸುಧಾಕರ್, ಮಲ್ಲಿಕಾರ್ಜುನ, ಶಿವಕುಮಾರ್, ದ್ಯಾವಯ್ಯ ಮತ್ತಿತರರು ಇದ್ದರು.
ವರದಿ: ಗಿರೀಶ್ ರಾಜ್, ಮಂಡ್ಯ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘CBI ಮುಕ್ತ ಅನುಮತಿ ಅಧಿಸೂಚನೆ’ ವಾಪಾಸ್ಸಿಗೆ ಮಹತ್ವದ ನಿರ್ಧಾರ