ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.
ಚುನಾವಣಾ ಬಾಂಡ್ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ತ್ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ಎಫ್ ಐಆರ್ ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶ ಮಾಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್ ಮುಂದೂಡಿದೆ.
ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು. 2019 ಏಪ್ರಿಲ್ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್ವಾಲ್ ಅವರ ಸಂಸ್ಥೆಯ ಕಡೆಯಿಂದ ಸುಮಾರು 230 ಕೋಟಿ ರೂ. ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಚುನಾವಣಾ ಬಾಂಡ್ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.