ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಗೊಂದಲ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ.
ರಾಜ್ಯದಲ್ಲಿ ಕೇಂದ್ರದ ನೋಂದಣಿ ಕಾಯಿದೆ-1908ಗೆ ತಿದ್ದುಪಡಿ ತರುವ ಕರ್ನಾಟಕ ನೋಂದಣಿ ತಿದ್ದುಪಡಿ ಕಾಯಿದೆ -2023ಕ್ಕೆ ರಾಷ್ಟ್ರಪತಿಗಳು ಅ.8 ರಂದು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಅ.19 ರಂದು ಅಧಿಕೃತ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ. ಹೊಸ ನೋಂದಣಿ ತಿದ್ದುಪಡಿ ಕಾಯ್ದೆಯಲ್ಲಿ ನಕಲಿ ದಾಖಲೆ ಆಧರಿಸಿದ ನೋಂದಣಿಗೆ ಕಡಿವಾಣ ಹಾಕಲಾಗಿದೆ. ನಕಲಿ ದಸ್ತಾವೇಜು ಆಧರಿಸಿದ ನೋಂದಣಿ ಮಾಡಿದರೆ ಸಬ್ ರಿಜಿಸ್ಟ್ರಾರ್ ಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಲಾಗುವುದು. ಇದಕ್ಕೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದು ಸರ್ಕಾರದಿಂದ ಸ್ಪಷ್ಟನೆ ನಿರೀಕ್ಷಿಸಿ ನೋಂದಣಿಯನ್ನು ಸ್ಥಗಿತಗೊಳಿಸಿದ್ದಾರೆ.
`
ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ರಿಜಿಸ್ಟ್ರೇಷನ್ ಕಾಯಿದೆ 1908ರಲ್ಲಿ 22B ಹೊಸ ಸೆಕ್ಷನ್ ಪರಿಚಯಿಸುವುದರಿಂದ ಕೇಂದ್ರ ಕಛೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆಯನ್ನು / ನೋಂದಣಿಯನ್ನು ಅನಿರ್ದಿಷ್ಟಾವಧಿವರೆಗೂ ಮುಂದೂಡುತ್ತಿದ್ದೇವೆ ಎಂದು ತಿಳಿಸಲಾಗಿದೆ.