ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಭೀಕರ ದುರಂತ ಸಂಭವಿಸಿದ್ದು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೆಣ್ಣೂರು ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಣ್ಣೂರು ಠಾಣೆ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ.ಬಂಧಿತರನ್ನ ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿಯಪ್ಪ ಎಂದು ಹೇಳಲಾಗುತ್ತಿದೆ.ನಾಲ್ಕು ಮಹಡಿ ಕಟ್ಟಡ ನಿರ್ಮಾಣಕ್ಕೆ ಭುವನ್ ರೆಡ್ಡಿ ಅನುಮತಿ ಪಡೆದಿದ್ದ. 6ನೇ ಮಹಡಿ ನಿರ್ಮಾಣದ ವೇಳೆ ನಿನ್ನೆ ಕಟ್ಟಡ ಕುಸಿದು ಬಿದ್ದಿತ್ತು. ಕಟ್ಟಡ ಕುಸಿದು ಇದುವರೆಗೂ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮುಂದುವರೆದ ಕಾರ್ಯಾಚರಣೆ
ಮೊಹಮ್ಮದ್ ಸಾಹಿಲ್, ತಿರುಪಾಲಿ, ಅರ್ಮಾನ್, ಶಂಕರ್, ಸತ್ಯರಾಜ್ ಮೃತಪಟ್ಟವರು. ರಾತ್ರಿ ಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆದಿದೆ. ಕಾಮಗಾರಿಯ ವೇಳೆಗೆ 21 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಈಗಾಗಲೇ ಅಗ್ನಿಶಾಮಕ, ಎನ್ಡಿಆರ್ಎಫ್, ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ 13 ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.
ಈ ಪೈಕಿ 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಹಲವು ಅವೇಶಷಗಳಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ಒಂದು ಹ್ಯಾಮರ್, ಮೂರು ಜೆಸಿಬಿಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.