ಮಂಡ್ಯ : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ಸಾವನಪ್ಪಿದ್ದರು. ಇಂದು ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವರ ಹುಟ್ಟೂರಾದ ಸೋಮನಹಳ್ಳಿಗೆ ತಂದು, ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಎಸ್ಎಮ್ ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಅವರು ತಾತನ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.
ಈ ಒಂದು ಅಂತ್ಯಕ್ರಿಯೆಯಲ್ಲಿ ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದು, ಅಂತ್ಯಕ್ರಿಯೆಗೆ ಸುಮಾರು 15 ಜನ ಸ್ವಾಮೀಜಿಗಳು ವೇದ ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ, ಒಕ್ಕಲಿಗ ಸಂಪ್ರದಾಯದಂತೆ ಎಸ್ ಎಂ ಕೃಷ್ಣ ಅವರ ಚಿತೆಗೆ ಅವರ ಪ್ರೀತಿಯ ಮೊಮ್ಮಗ ಆದಂತಹ ಅಮರ್ತ್ಯ ಅವರು ಅಗ್ನಿಸ್ಪರ್ಶಿಸುವ ಮೂಲಕ ತಾತನ ಚಿತೆಗೆ ಅಗ್ನಿಸ್ಪರ್ಶಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಅಂತ್ಯಕ್ರಿಯೆಗೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದಂತಹ ಹೆಚ್ಡಿ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.
ಎಸ್.ಎಂ.ಕೃಷ್ಣ ಅವರ ರಾಜಕೀಯ ಜೀವನದ ಹಿನ್ನೋಟ
1962 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. ಬಳಿಕ ಹಲವಾರು ಬಾರಿ ಶಾಸಕರು, ಮಂತ್ರಿಗಳು, ಹಾಗೂ ಕೇಂದ್ರ ಸಚಿವರು, ರಾಜ್ಯಸಭೆಗೂ ಆಯ್ಕೆಯಾಗಿದ್ದರು. ಬಳಿಕ 1999 ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಎಸ್ಎಂ ಕೃಷ್ಣ ಮುನ್ನೆಡಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 132 ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಿತು.
ಮಂಡ್ಯ ಜಿಲ್ಲೆಯಿಂದ ಮುಖ್ಯಮಂತ್ರಿಯಾದ ಮೊದಲಿಗ ಎಸ್ಎಂ ಕೃಷ್ಣ ಎನ್ನಲಾಗಿದೆ.
ಮೊದಲ ಘಟನೆ
ಈ ವೇಳೆ ಮದ್ದೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಎಸ್ಎಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಈ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮೊದಲ ನಾಯಕ ಸಿಎಂ ಆಗಿರುವ ಹೆಗ್ಗಳಿಕೆಗೆ ಕೃಷ್ಣ ಅವರು ಪಾತ್ರರಾಗಿದ್ದಾರೆ. ಇವರು ಸಿಎಂ ಆಗಿದ್ದ ವೇಳೆ ರಾಜ್ಯದಲ್ಲಿ ಎರಡು ಘಟನೆಗಳು ದೊಡ್ಡ ಮಟ್ಟದ ಚರ್ಚೆ ಉಂಟಾಯಿತು. ಡಾ. ರಾಜ್ಕುಮಾರ್ ಅವರನ್ನು ವೀರಪ್ಪನ್ ಮೂರು ತಿಂಗಳ ಕಾಲ ಅಪಹರಣ ಮಾಡಿದ್ದ.ಆಗ ರಾಜ್ಯದ್ಯಾಂತ ಸರಕಾರದ ವಿರುದ್ಧ ಹೋರಾಟಗಳು ನಡೆದವು. ಬಳಿಕ ಕೃಷ್ಣ ಅವರು ಅಂದಿನ ತಮಿಳುನಾಡು ಸಿಎಂ ಜಯಲಲಿತ ಅವರೊಮದಿಗೆ ಮಾತುಕತೆ ನಡೆಸಿ, ಬಳಿಕ ವೀರಪ್ಪನ್ ಸಂಪರ್ಕ ಮಾಡಿ ರಾಜ್ಕುಮಾರ್ ಅವರನ್ನು ಕ್ಷೇಮವಾಗಿ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಎರಡನೇ ಘಟನೆ
ಬಳಿಕ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿತ್ತು.ಆ ವೇಳೆ ರಾಜ್ಯ ಜನರ ರಕ್ಷಣೆಗೆ ವೈಜ್ಞಾನಿಕವಾಗಿ ಮೋಡ ಬಿತ್ತನೆ ಮಾಡಿ ಮಳೆ ಬರಿಸಲು ಸಹ ಕೃಷ್ಣ ಅವರು ಮುಂದಾಗಿದ್ದರು. ಆದರೆ ದುರಾದೃಷ್ಟವಶಾತ್ ಈ ಪ್ಲಾನ್ ಕೈಕೊಟ್ಟಿತು. ಈ ವೇಳೆ ತಮಿಳುನಾಡು ಕಾವೇರಿ ನೀರಿಗಾಗಿ ಕ್ಯಾತೆಯನ್ನು ಸಹ ತೆಗೆಯಿತು. ಮಂಡ್ಯ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ತೀವ್ರ ಸ್ವರೂಪದ ಹೋರಾಟಗಳು ಸಹ ಜರುಗಿದವು.ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಎಸ್ಎಂ ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿದ್ದು, ಸರಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಯಶಸ್ವಿನಿ ಯೋಜನೆ, ಬೆಂ-ಮೈ ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದು, ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಸೇರಿದಂತೆ ಇನ್ನೂ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ.
2004 ರಲ್ಲಿ ಕೃಷ್ಣ ಅವರು ತಮ್ಮ ಸ್ವಕ್ಷೇತ್ರ ಮದ್ದೂರು ಕ್ಷೇತ್ರವನ್ನು ಡಿಸಿ ತಮ್ಮಣ್ಣಗೆ ಬಿಟ್ಟುಕೊಟ್ಟು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ವಿಧಾಸಭಾ ಚುನಾವಣೆಯನ್ನು ಎದುರಿಸುತ್ತಾರೆ. ಚಾಮರಾಜಪೇಟೆಯಲ್ಲೂ ಸಹ ಕೃಷ್ಣ ಅವರು ಗೆಲುವು ಸಾಧಿಸುತ್ತಾರೆ ಬಳಿಕ ಚಾಮರಾಜಪೇಟೆಯ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ 2004 ರಲ್ಲಿ ಮಹಾರಾಷ್ಟದ ರಾಜ್ಯಪಾಲರಾಗಿ ನೇಮಕಗೊಂಡಿದ್ದರು.2009 ರಲ್ಲಿ ಮನಮೋಹನ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2012 ರಂದು ವಿದೇಶಾಂಗ ಸಚಿವ ಸ್ಥಾನಕ್ಕೂ ಕೃಷ್ಣ ಅವರು ರಾಜಿನಾಮೆ ನೀಡಿದ್ದರು. ಬಳಿಕ 2017 ರಂದು ಕಾಂಗ್ರೆಸ್ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಎಸ್ಎಂ ಕೃಷ್ಣ 2017 ರಲ್ಲೇ ಬಿಜೆಪಿ ಪಕ್ಷಕ್ಕೆ ಎಸ್.ಎಂ.ಕೃಷ್ಣ ಸೇರ್ಪಡೆಯಾಗಿದ್ದರು. 2022 ಜನವರಿ 7 ರಂದು ಎಸ್ಎಂ ಕೃಷ್ಣ ತಮ್ಮ 60 ವರ್ಷಗಳ ಸುದೀರ್ಘ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.ಎಸ್ಎಂ ಕೃಷ್ಣ ತಮ್ಮ 60 ವರ್ಷಗಳ ಸುದೀರ್ಘ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.