ದಾವಣಗೆರೆ : ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಕೂಡಲ ಸಂಗಮ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಮುಗಿಸಲು, ಹೋರಾಟಗಾರರ ಮೇಲೆ ಗೋಲಿಬಾರ್ ಮಾಡಲು ಸಂಚು ಮಾಡಿದ್ದರು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸ್ಫೋಟಕವಾದ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀ ಜಯ ಮೃತ್ಯುಂಜಯ ಸ್ವಾಮಿಗಳು ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದಾರೆ. ಪ್ರತಿಭಟನೆ ನೇತೃತ್ವ ವಹಿಸಿರುವ ಅವರನ್ನೇ ಮುಗಿಸಿದರೆ, ರಾಜ್ಯದಲ್ಲಿ ಇಡೀ ಹೋರಾಟವೇ ನಿಲ್ಲುತ್ತದೆಂದು ಗೋಲಿಬಾರ್ ಮಾಡಲು ಕೆಲವರು ಪ್ಲಾನ್ ಮಾಡಿಕೊಂಡಿದ್ದರು. ಎಂದರು.
ಪಂಚಮಸಾಲಿ, ಮಲೆಗೌಡ, ಗೌಡ ಲಿಂಗಾಯತ, ದೀಕ್ಷಾ ಗೌಡಗೂ ಮೀಸಲಾತಿ, ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ನಿರಂತರ ಹೋರಾಡುತ್ತಾ ಬಂದಿದ್ದಾರೆ. ಸ್ವಾಮೀಜಿ ಮೇಲಿನ ಹಲ್ಲೆ, ದೌರ್ಜನ್ಯ, ಬಂಧನವನ್ನು ಸಮಸ್ತ ಮಠಾಧೀಶರು, ಸ್ವಾಮೀಜಿಗಳು ಖಂಡಿಸಬೇಕು ಎಂದರು.
ಶ್ರೀಗಳು, ಸಮಾಜದ ಮುಖಂಡರು, ಹೋರಾಟಗಾರರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹೋರಾಟಗಾರರ ಲಾಠಿ ಬೀಸದೇ, ಮುತ್ತು ಕೊಡಲು ಕೇಳಬೇಕಿತ್ತಾ ಎಂಬುದಾಗಿ ಲಘುವಾಗಿ ಮಾತನಾಡಿರುವ ಗೃಹ ಸಚಿವ ಡಾ.ಪರಮೇಶ್ವರ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.