ಧಾರವಾಡ : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ತೀರ್ಪು ಪ್ರಕಟಿಸಲಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು CBI ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ CBI ತನಿಖೆಗೆ ಕೊಡುತ್ತಾ ಎಂದು ಕಾದು ನೋಡಬೇಕಾಗಿದೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು ಹಾಗಾಗಿ ಇಂದು ಧಾರವಾಡ ಪೀಠ ಆದೇಶ ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.