ಮೈಸೂರು : ಮೈಸೂರಿನಲ್ಲಿ ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಪೋಸ್ಟ್ ನಿಂದಾಗಿ ಡಿಜೆಹಳ್ಳಿ, ಕೆಜಿ ಹಳ್ಳಿ ಮಾದರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿಯಾಗಿದ್ದು, ಪೊಲೀಸ್ ಠಾಣೆ, ಡಿಸಿಪಿ ವಾಹನಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.
ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ್ ಎಂಬಾತ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದು, ಇದರಿಂದ ಉದ್ರಿಗ್ತಗೊಂಡ ರಾತ್ರಿ ಸಾವಿರಾರು ಮಂದಿ ದಿಢೀರ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ.ಸದ್ಯ ಆರೋಪಿ ಸುರೇಶ್ ವಿರುದ್ಧ ದೂರು ದಾಖಲಿಸಿ ಉದಯಗಿರಿ ಠಾಣೆಯ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು ವಿವಸ್ತ್ರಗೊಳಿಸಿ ತಲೆ ಮೇಲೆ ಸಮುದಾಯವೊಂದರ ವೇಷ ಭೂಷಣ, ಕೆಲ ಆಕ್ಷೇಪಾರ್ಹ ಪದಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದಕ್ಕೆ ಆಕ್ರೋಶಗೊಂಡ ಒಂದು ಸಮುದಾಯದ ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.