ಬೆಂಗಳೂರು : ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ, ಗ್ರಾಮ ಪಂಚಾಯತಿಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸುವಂತೆ ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.
ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ವಿಶೇಷವಾದ ಮಹತ್ವವಿದೆ. ಗ್ರಾಮ ಪಂಚಾಯತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ಗ್ರಾಮ ಪಂಚಾಯಿತಿಗಳು ಸ್ಥಳೀಯವಾಗಿ ಜನರಿಗೆ ಅವಶ್ಯವಾಗಿ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಲು ಹಾಗೂ ದೈನಂದಿನ ಸೇವೆಗಳನ್ನು ನೀಡಲು ತಾವೇ ಕಾರ್ಯಕ್ರಮಗಳನ್ನು ರೂಪಿಸಬೇಕು ಎನ್ನುವುದು ನನ್ನ ಉದ್ದೇಶ ಎಂದು ಹೇಳಿದ್ದಾರೆ.
ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಷಯವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಆಯವ್ಯಯ ಸಿದ್ದಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಗ್ರಾಮ ಪಂಚಾಯತಿಗಳು ಇನ್ನಷ್ಟು ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.