ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು:
• ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಯಾವತ್ತೂ ದುಡಿಯುವ ವರ್ಗದ ಪರವಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
• ಹಿಂದಿನ ಸರ್ಕಾರ ಸುಮಾರು 40 ಸಾವಿರ ಕೋಟಿ ರೂ. ಬಾಕಿ ಬಿಲ್ಲುಗಳನ್ನು ಉಳಿಸಿ ಹೋಗಿದೆ. ಇದು ಸರ್ಕಾರದ ಮೇಲೆ ಆರ್ಥಿಕ ಹೊರೆ ಉಂಟು ಮಾಡಿದೆ. ಸರ್ಕಾರದ ಇತಿಮಿತಿಯ ಒಳಗಾಗಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು.
• ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿದಂತೆ ಎಲ್ಲಾ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಬೇಡಿಕೆಗಳ ಈಡೇರಿಕೆ ಕುರಿತಾಗಿ ಇನ್ನೊಮ್ಮೆ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು ಎಂದರು.
• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಂಸ್ಥೆಗೆ ರೂ. 4ಸಾವಿರ ಕೋಟಿಯಷ್ಟು ಮೊತ್ತವನ್ನು ಹಿಂದಿನ ಸರ್ಕಾರ ಬಾಕಿ ಉಳಿಸಿ ಹೋಗಿತ್ತು. ಸಂಸ್ಥೆಯನ್ನು ಬಲಪಡಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ನೌಕರರಿಗೆ ನಗದು ರಹಿತ ಚಿಕಿತ್ಸೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ವರ್ಷದ ಬಜೆಟ್ನಲ್ಲಿ 350 ಕೋಟಿ ಸಾಲವನ್ನು ಪಡೆಯಲು ಸಂಸ್ಥೆಗೆ ಅನುಮತಿ ನೀಡಲಾಗಿದೆ. ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಲು 2ಸಾವಿರ ಬಸ್ಗಳನ್ನು ಹೊಸದಾಗಿ ಖರೀದಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ನೀಡಿದರು.
• ಚಾಲಕ ಮತ್ತು ನಿರ್ವಾಹಕರ ಮಾದರಿಯಲ್ಲಿ ಮೆಕ್ಯಾನಿಕ್ಗಳ ನೇಮಕಾತಿಗೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
• ದಿನಾಂಕ 01/01/24 ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ಮತ್ತು ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು.
• 01.01.20ರಿಂದ ಜಾರಿಯಾಗಬೇಕಾದ ವೇತನ ಪರಿಷ್ಕರಣೆ 01.03.23ರಿಂದ ಅನುಷ್ಠಾನಕ್ಕೆ ಬಂದಿದ್ದು, 38 ತಿಂಗಳ ಬಾಕಿ ಹಣವನ್ನು ಪಾವತಿಸಬೇಕು.
• ಈ ಹಿಂದೆ 2020 ಮತ್ತು 2021ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು.
• ಸಾರಿಗೆ ನಿಗಮದ ವಿದ್ಯುತ್ ಬಸ್ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು. ಸದರಿ ಬಸ್ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿಯನ್ನು ಕೈಬಿಡಬೇಕು ಎಂದು ಕಾರ್ಮಿಕ ಸಮಿತಿಗಳ ಪ್ರತಿನಿಧಿಗಳು ಮನವಿ ಮಾಡಿದರು.
• ಸಚಿವರಾದ ಜಿ.ಪರಮೇಶ್ವರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜ್, ನಸೀರ್ ಅಹ್ಮದ್, ಸಾರಿಗೆ ನಿಗಮಗಳ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್, ರಾಜು ಕಾಗೆ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.