ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ, ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಹಾಜರಾತಿಯಿಂದ ವಿನಾಯಿತಿ ಕೋರಿ ಹೆಚ್ಡಿ ಕುಮಾರಸ್ವಾಮಿ ಪರವಾಗಿ ವಕೀಲರು ಅರ್ಜಿ ಸಲ್ಲಿಸಿದ್ದರು.
ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ಕಾರಣ ನೀಡಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಡಿ ಕುಮಾರಸ್ವಾಮಿ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿದೆ. ಅಲ್ಲದೇ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ದಾಖಲೆ ಹಾಜರುಪಡಿಸಲು ಎಚ್ ಡಿ ಕುಮಾರಸ್ವಾಮಿ ಪರ ವಕೀಲರಿಗೆ ಸೂಚನೆ ನೀಡಿತು.
ಪ್ರಕರಣ ಹಿನ್ನೆಲೆ?
ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದಾಖಲೆಗಳ ಸಮೇತ ಮಹದೇವಸ್ವಾಮಿ 2012ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಕುಮಾರಸ್ವಾಮಿ ಜೊತೆಗೆ ಪದ್ಮಾ, ಶ್ರೀದೇವಿ, ಚೇತನ್ಕುಮಾರ್, ಕೆ.ಬಿ ಶಾಂತಮ್ಮ, ಎಸ್. ರೇಖಾ ಚಂದ್ರು, ಯೋಗ ಮೂರ್ತಿ, ಬಿ.ನರಸಿಂಹುಲು ನಾಯ್ಡು, ಆರ್. ಬಾಲಕೃಷ್ಣ, ಟಿ. ಮುರುಳಿಧರ್, ಜಿ. ಮಲ್ಲಿಕಾರ್ಜುನ, ಇ.ಎ ಯೋಗೇಂದ್ರನಾಥ, ಪಿ.ಜಗದೀಶ, ಡಿ.ಎಸ್ ದೀಪಕ್, ಎಂ.ಸುಬ್ರಮಣಿ, ಬಾಲಾಜಿ ಇನ್ಫ್ರಾ, ಶುಭೋಧಯ ಬಿಲ್ಡರ್ಸ್, ಸನ್ರೈಸ್ ಬಿಲ್ಡರ್ಸ್ ಮತ್ತು ಆರತಿ ಡೆವಲಪರ್ಸ್ ಪ್ರಮುಖರು ಆರೋಪಿತರಾಗಿದ್ದಾರೆ.
ಈ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ದೂರುದಾರ ಮಹಾದೇವಸ್ವಾಮಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಇದನ್ನು ಪ್ರಶ್ನಿಸಿ ಕಳೆದ ಫೆಬ್ರವರಿಯಲ್ಲಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂಕೋರ್ಟ್ ಎಚ್ಡಿ ಕುಮಾರಸ್ವಾಮಿ ಅರ್ಜಿಯನ್ನು ವಜಾಗೊಳಿಸಿದೆ.