ಬೆಂಗಳೂರು : ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಗಿತ್ತು ಎಂದರು.
ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ, ಅದನ್ನು ಇಂದು ಈಡೇರಿಸಲಾಗಿದೆ. ಇದರಿಂದ ಪೌರಕಾರ್ಮಿಕರ ವೇತನ 39,000 ರೂ.ಗಳು ಅವರ ಖಾತೆಗೆ ನೇರವಾಗಿ ಪಾವತಿಯಾಗಲಿದೆ ಎಂದು ಹೇಳಿದ್ದಾರೆ.
ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ. 1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಮತ್ತವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರುತ್ತೇನೆ. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ.