ಬೆಂಗಳೂರು : ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ ಹಬ್ ಹೀಗೆ ಹಲವು ವಿಚಾರಗಳಲ್ಲಿ ಬೆಂಗಳೂರು ಈಗಾಗಲೇ ವಿಶ್ವಮಟ್ಟದಲ್ಲಿ ಮಹತ್ವ ಪಡೆದಿದೆ. ಇದೀಗ ರಾಜಧಾನಿ ನಗರದ ಹೆರಿಗೇ ‘ಗ್ರೇಟರ್’ ಎಂಬ ಕಿರೀಟ ತೊಡಿಸಲು ಸರ್ಕಾರ ಮುಂದಾಗಿದೆ. ಇದೀಗ ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗಿದೆ. ಇನ್ಮುಂದೆ ಬಿಬಿಎಂಪಿ ಇರುವುದಿಲ್ಲ ಜಿಬಿಎ ಆಗಲಿದೆ. ಗ್ರೇಟರ್ ಬೆಂಗಳೂರು ಕಾಯ್ದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. ಗ್ರೇಟರ್ ಬೆಂಗಳೂರು ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಾನು ಅಧ್ಯಕ್ಷ ಆಗಿರುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಸದ್ಯ ಬಿಬಿಎಂಪಿ ವಿಸರ್ಜನೆಯಾಗಿದ್ದು, 3 ಭಾಗಗಳಾಗಿ ಬೆಂಗಳೂರು ವಿಂಗಡಣೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಸೇರಿ ಮೂರು ಭಾಗಗಳಾಗಿ ವಿಂಗಡಣೆ ಮಾಡಲು ಚಿಂತನೆ ಮಾಡಲಾಗುತ್ತಿದೆ. ಪ್ರತೀ ಪಾಲಿಕೆಯಲ್ಲೂ125 ವಾರ್ಡ್ ಗಳು ಇರಲಿವೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ – 2024ರ ಕಲಂ 1(2)ರ ಕಲಂ 3ರಂತೆ ಬಿಬಿಎಂಪಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರದೇಶವೆಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಅಲ್ಲದೇ ಈ ಗ್ರೇಟರ್ ಬೆಂಗಳೂರು ಬಡಜನರಿಗೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಕೂಡ ಹೆಚ್ಚಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ – 2024ರ ಅನುಸಾರದಲ್ಲಿ ಆಡಳಿತಕ್ಕೆ ಬರಲಿದೆ. ಮುಖ್ಯಮಂತ್ರಿ ನೇತೃತ್ವದ ಗ್ರೇಟರ್ ಬೆಂಗಳೂರು ಪ್ರಾಧಿಕಾರವು 120 ದಿನಗಳಲ್ಲಿ ರಚನೆಯಾಗಬೇಕಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ)ಕ್ಕೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ. ಬೆಂಗಳೂರು ಅಭಿವೃದ್ಧಿ ಸಚಿವರೇ ಜಿಬಿಎ ನ ಉಪಾಧ್ಯಕ್ಷರಾಗಿರುತ್ತಾರೆ. ಮೂರು ನಗರ ಪಾಲಿಕೆಗಳು ತಲಾ 125 ವಾರ್ಡ್ಗಳನ್ನು ಒಳಗೊಂಡಿರುತ್ತದೆ. ಪ್ರತಿ ಪಾಲಿಕೆಗೂ ‘ಗ್ರೇಟರ್ ಬೆಂಗಳೂರು ಪ್ರದೇಶ’ದ ಗಡಿ ನಿಗಧಿಪಡಿಸಲಾಗುತ್ತದೆ.