ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಮಳೆಯ ಆರ್ಭಟ ಮುಂದುವರೆಯಲಿದ್ದು, ಹವಾಮಾನ ಇಲಾಖೆಯು 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಶುರುವಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ ಹೊರತಾಗಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವು ಕಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು, ಗುರುವಾರದಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆಯ ಹಲವು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.