ಮಂಡ್ಯ : ಕೆಲ ದಿನಗಳ ಹಿಂದೆ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಉಳಿವು ಹೋರಾಟ ಸಮಿತಿ ಸದಸ್ಯರು ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಜಮಾವಣೆಗೊಂಡ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿ ಉಳಿವು ಹೋರಾಟ ಸಮಿತಿಯ ಸದಸ್ಯರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಮದ್ದೂರು ಪುರಸಭೆಯನ್ನು ರಾಜ್ಯ ಸರ್ಕಾರವು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆದರೆ, ಸೋಮನಹಳ್ಳಿ ಗ್ರಾಮ ಪಂಚಾಯಿತಿಯನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದರು.
ಗ್ರಾಮ ಪಂಚಾಯಿತಿಯನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೂ ಮುನ್ನ ಜಿಲ್ಲಾಡಳಿತ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಅದಲ್ಲದೇ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ಸರ್ವ ಸದಸ್ಯರು ಸಹ ಇದಕ್ಕೆ ಒಪ್ಪಿಗೆ ನೀಡಿಲ್ಲ. ಆದರೆ, ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಯಾವುದೋ ಒತ್ತಡಕ್ಕೆ ಮಣಿದು ಸರ್ಕಾರಕ್ಕೆ ವರದಿ ಸಲ್ಲಿಸಿರುವ ಪರಿಣಾಮ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ಇದಕ್ಕೆ ಗ್ರಾಮಸ್ಥರ ತೀವ್ರ ವಿರೋಧವಿದೆ ಎಂದು ಕಿಡಿಕಾರಿದರು.
ಮಾಜಿ ತಾಲೂಕು ಪಂಚಾಯತಿ ಸದಸ್ಯ ಸತೀಶ್ ಮಾತನಾಡಿ, ನಗರಸಭೆಗೆ ನಮ್ಮ ಗ್ರಾಮಗಳು ಸೇರ್ಪಡೆಯಾದರೇ ತೆರಿಗೆ ಹೆಚ್ಚಳ, ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಪೈಪೋಟಿ ಜಾಸ್ತಿ ಆಗುತ್ತೆ. ಅಲ್ಲದೇ ಶಾಲಾ ಮಕ್ಕಳಿಗೆ ಈಗ ದೊರೆಯುತ್ತಿರುವ ಶೇಕಡಾ 10% ಗ್ರಾಮೀಣ ಕೃಪಾಂಕ ಕಡಿತವಾಗುತ್ತದೆ. ನರೇಗಾದ ಅಡಿ ಕೆಲಸಗಳು ಬಡ ಜನರಿಗೆ ಸಿಗಲ್ಲ. ಅಷ್ಟೋ ಇಷ್ಟು ಕೃಷಿ ಭೂಮಿಯಿಂದ ರೈತರು ಬೇಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಇದೆಲ್ಲವೂ ಖಾಸಗಿಕರಣವಾದರೇ ಜೀವನ ನಡೆಸುವುದು ಹೇಗೆ ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಹೀಗಾಗಿ ನಮಗೆ ನಗರಸಭೆ ಬೇಡವೇ ಬೇಡ. ಗ್ರಾಮ ಪಂಚಾಯಿತಿಯೇ ಸಾಕು. ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದೊಡ್ಡದಾದ ಕೈಗಾರಿಕಾ ಪ್ರದೇಶವಿದ್ದು ಅದರಿಂದ ನಮ್ಮ ಪಂಚಾಯತಿಗೆ ಹೆಚ್ಚು ವರಮಾನ ಬರುತ್ತಿದೆ. ಅದರಿಂದಲೇ ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಹಲವು ಅಭಿವೃದ್ಧಿ ಕೆಲಸಗಳು ನಡೆದಿವೆ ಮತ್ತು ನಡೆಯುತ್ತಿವೆ. ಒಂದು ವೇಳೆ ನಗರಸಭೆಗೆ ಸೇರಿಸಿದರೆ ವ್ಯಾಪ್ತಿ ದೊಡ್ಡದಾಗುತ್ತದೆ. ಆಗ ಗ್ರಾಮಗಳ ಅಭಿವೃದ್ಧಿಗೆ ಜನರು ಪರದಾಡಬೇಕಾಗುತ್ತದೆ ಹೀಗಾಗಿ ನಮ್ಮ ಗ್ರಾಮ ಪಂಚಾಯಿತಿಯನ್ನು ನಗರಸಭೆ ವ್ಯಾಪ್ತಿಗೆ ಸೇರಿಸದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಕೂಡಲೇ ಸೋಮನಹಳ್ಳಿಯನ್ನು ನಗರಸಭೆಗೆ ಸೇರಿಸುವ ನಿರ್ಧಾರವನ್ನು ಕೈ ಬಿಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ದ ಉಗ್ರ ಪ್ರತಿಭಟನೆ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾ.ಪಂ ಇಓ ರಾಮಲಿಂಗಯ್ಯ, ತಾಪಂ ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಗೊರವನಹಳ್ಳಿ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆ ಸೇರ್ಪಡೆಗೆ ವಿರೋಧಿಸಿ ಗೊರವನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಚಿಕ್ಕೇಗೌಡ, ಸತೀಶ್, ಪ್ರದೀಪ್, ಅಂಬರೀಷ್, ಶಿವಣ್ಣ, ರವಿ, ಮಹೇಶ್, ಹರಿಕೃಷ್ಣ, ರಾಜು, ಮನು, ಭಗವಾನ್, ವೆಂಕಟೇಶ ಸೇರಿದಂತೆ ಹಲವರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್
ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ