ಮೈಸೂರು :ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 5,000 ರಿಂದ 30,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು.
ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಈ ಮೂಲಕ ಕೋರಲಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ ಹಾಗೂ ಘೋಸಾಯ್ ಘಾಟ್ಗೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.