ಶಿವಮೊಗ್ಗ : ಖಾಸಗಿ ಶಾಲೆಗಳು ಮಕ್ಕಳನ್ನು ಕೇವಲ ಬುದ್ಧಿವಂತರನ್ನಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಮಕ್ಕಳ ವ್ಯಕ್ತಿತ್ವ ರೂಪಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿ ಎಂದು ಸೊರಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನವೀನ್ ರವರು ಹೇಳಿದರು.
ಸೊರಬ ತಾಲ್ಲೂಕು ಕ್ಯಾಸನೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ನೀಡಲಾಗಿರುವ ಬ್ಯಾಗ್ ಮತ್ತು ನಿಸ್ತಂತು ವಿಭಾಗದ ಪಿಎಸ್ಐ ಗಿರಿರಾಜ್ ರವರು ನೀಡಿರುವ “ನನ್ನ ಸೈಕಲ್ಲು” ಎಂಬ ಮಕ್ಕಳ ಕಥಾ ಪುಸ್ತಕದ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಯುವ ಬೆಂಗಳೂರಿನಂತಹ ಟ್ರಸ್ಟ್ ಗಳು ಕೈಗೊಳ್ಳುತ್ತಿರುವ ಕಾರ್ಯಗಳು ಶ್ಲಾಘನೀಯ ಎಂದರು. ಸರ್ಕಾರಿ ಶಾಲೆಗಳು ಶಾಲೆಗಳಲ್ಲಿ ಇಂದಿನ ದಿನಗಳಲ್ಲಿ ಸೌಲಭ್ಯಗಳು ಉತ್ತಮ ರೀತಿಯಲ್ಲಿ ದೊರಕುತ್ತಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕನ್ನು ರೂಪಿಸಿಕೊಳ್ಳಿ ಎಂದು ಮಕ್ಕಳಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ವಿಕಾಸ್ ಕ್ಯಾಸನೂರು, ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.
ವರದಿ: ವಿಕಾಸ್ ಕ್ಯಾಸನೂರು