ಹಾವೇರಿ : ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ ಆಗುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಕಳೆದ ಕೆಲವು ದಿನಗಳಿಂದ ಹಲವು ಬದಲಾವಣೆಗಳಾಗುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಈ ಗೊಂದಲದ ಫಲಶ್ರುತಿ ಎಂಬಂತೆ 2026 ರಲ್ಲಿ ಕರ್ನಾಟಕಕ್ಕೆ ಮಧ್ಯಂತರ ಚುನಾವಣೆ ಬರೋ ಸಾಧ್ಯತೆ ಇದೆ. ಯಾವಾಗ ಚುನಾವಣೆ ಬಂದರೂ ಚುನಾವಣೆ ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಅವರು ಸ್ಫೋಟಕವದ ಭವಿಷ್ಯ ನುಡಿದರು.
ರಾಜ್ಯದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಹಿಡಿದು ಕೊಲೆ ಸುಲಿಗೆ ಸಾಮಾನ್ಯವಾಗಿದೆ. ಡ್ರಗ್ಸ್ ಸಿಕ್ಕ ಸಿಕ್ಕಲ್ಲಿ ಮಾರ್ತಾ ಇದಾರೆ. ದಿನ ನಿತ್ಯ ಕೊಲೆ ಸುಲಿಗೆ ಕಾಣ್ತಾ ಇಲ್ಲವಾ ಇವರಿಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರನ್ನು ಮೊದಲಿನಿಂದ ನೋಡುತ್ತಿದ್ದೇನೆ. ಕಳೆದ 5 ವರ್ಷ ಸಿಎಂ ಆದಾಗ ನೋಡಿದ್ದೇನೆ. ಸಿದ್ದರಾಮಯ್ಯ ಇಷ್ಟು ಅಸಾಯಕರಾಗಿ ಇರೋದನ್ನ ನೋಡೇ ಇಲ್ಲ ಎಂದು ಬೊಮ್ಮಾಯಿ ಹೇಳಿದರು.