ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ನಾಡ ಕಚೇರಿಯಲ್ಲೂ ಆಸ್ತಿ ಡಿಜಿಟಲ್ ದಾಖಲೆಗಳನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ಭೂಸು ರಕ್ಷಾ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ ದಾಖಲೆಗಳಿಗಾಗಿ ಜನರು ಅಲೆದಾಡುವುದನ್ನು ತಪ್ಪಿಸಲು ಜಾರಿಗೆ ತಂದಿರುವ ಭೂ ಸುರಕ್ಷಾ ಯೋಜನೆಯಡಿ ಆಸ್ತಿ ದಾಖಲೆಗಳನ್ನು ಡಿಜಟಲೀಕರಣ ಮಾಡಿ ಆನ್ಲೈನ್ ಮೂಲಕ ವಿತರಿಸಲಾಗುತ್ತಿದೆ. ಇನ್ನು ಮುಂದೆ ಹೋಬಳಿ ಮಟ್ಟದಲ್ಲಿರುವ ನಾಡಕಚೇರಿಗಳಲ್ಲೂ ದಾಖಲೆ ನೀಡಲಾಗುವುದು ಎಂದು ಹೇಳಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಗೊತ್ತಿಲ್ಲದವರಿಗೂ ಡಿಜಿಟಲ್ ದಾಖಲೆ ಸಿಗಲು ನಾಡ ಕಚೇರಿಗಳಲ್ಲಿ ಅಟಲ್ ಜನಸ್ನೇಹಿ ಕೇಂದ್ರ ಗಳಲ್ಲಿ ವ್ಯವಸ್ಥೆಮಾಡಲಾಗಿದೆ. ಜನ ಈ ಕೇಂದ್ರಗಳಿಗೆ ಭೇಟಿ ನೀಡಿ ನೇರವಾಗಿ ದಾಖಲೆ ಪಡೆಯಬಹುದು ಎಂದರು.
ನಾಡ ಕಚೇರಿಗಳಲ್ಲಿ ಉತ್ತಮ ಸ್ಪಂದನೆ ದೊರೆತರೆ, ಮುಂಬರುವ ದಿನಗಳಲ್ಲಿ ಈ ಸೇವೆಗಳನ್ನು ಗ್ರಾಪಂ ಮಟ್ಟಕ್ಕೂ ವಿಸ್ತರಿಸಲು ಉದ್ದೇಶಿಸಲಾಗಿದೆ. ಅಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ಗಳು ಮೂಲಕ ಜನ ಡಿಜಿಟಲ್ ದಾಖಲೆಗಳನ್ನು ಪಡೆಯಬಹುದು ಎಂದರು.