ಮಂಡ್ಯ : ಬನ್ನಹಳ್ಳಿ ಏತ ನೀರಾವರಿ ಯೋಜನೆಯ ಮೂಲಕ ಅತೀ ಶೀಘ್ರದಲ್ಲಿ 16 ಕೆರೆಗಳಿಗೆ ನೀರು ತುಂಬಿಸುವ ಮಹತ್ತರ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು.
ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕೆರೆ ಗ್ರಾಮದಲ್ಲಿ ಶುಕ್ರವಾರ 1 ಕೋಟಿ ರೂ ವೆಚ್ಚದ ಪರಿಶಿಷ್ಟ ಜಾತಿ ಕಾಲೋನಿಯ ಸಿ.ಸಿ.ರಸ್ತೆ ಮತ್ತು ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಮಸ್ಯೆ ಹಾಗೂ ಅನುದಾನದ ಕೊರತೆ ಹಾಗೂ ರೈತರ ಜಮೀನುಗಳಲ್ಲಿ ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೆಲ ರೈತರ ವಿರೋಧ ವ್ಯಕ್ತವಾಗಿತ್ತು. ಈಗಾಗಲೇ ಆ ರೈತರ ಜೊತೆ ನಾಲ್ಕೈದು ಬಾರಿ ಮಾತುಕತೆ ನಡೆಸಿ ಅವರಿಗೆ ಪರಿಹಾರ ನೀಡಲು ಮನವೊಲಿಸಲಾಗಿದೆ.
ಈಗಾಗಲೇ ವಿದ್ಯುತ್ ಸ್ಥಾವರದ ಕೆಲಸ ಕೂಡ ಪ್ರಾರಂಭವಾಗಿದ್ದು, ಉಳಿಕೆ ಕಾಮಗಾರಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿಗೆ ಅನುಮೋದನೆ ಸಿಕ್ಕಿದೆ. ಶೀಘ್ರದಲ್ಲೇ ಏತ ನೀರಾವರಿ ಯೋಜನೆ ಮೂಲಕ ಮುಂಬರುವ ಬೇಸಿಗೆ ವೇಳೆಗೆ ಸೋಮನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 16 ಕೆರೆಗಳಲ್ಲಿ ನೀರು ಸಂಗ್ರಹವಾಗುವ ಮೂಲಕ ರೈತರ ಕೃಷಿ ಚಟುವಟಿಕೆಗೆ ಬಳಕೆಯಾಗಲಿದೆ ಎಂದು ತಿಳಿಸಿದರು.
ರಸಗೊಬ್ಬರವನ್ನು ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ತಾಲೂಕಿನಾದ್ಯಂತ ವಿತರಿಸಲಾಗುತ್ತಿದೆ. ನಮ್ಮ ತಾಲೂಕಿನಲ್ಲಿ ರಸಗೊಬ್ಬರದ ಕೊರತೆಯಾಗಿಲ್ಲ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಯೂರಿಯಾ ಪೂರೈಕೆಗೆ ಅಗತ್ಯ ಕ್ರಮ ಕೈಕೊಳ್ಳಲಾಗಿದೆ. ರಾಜ್ಯಕ್ಕೆ ಅಗತ್ಯವಾಗಿ ಬೇಕಾಗಿರುವ ಯೂರಿಯಾವನ್ನು ನೀಡಬೇಕಾಗಿರುವ ಕೇಂದ್ರ ಸರ್ಕಾರವು ಈ ವಿಷಯದಲ್ಲೂ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಅದರಿಂದಾಗಿ ರಾಜ್ಯದ ಹಲವಾರು ಕಡೆಗಳಲ್ಲಿ ರಸಗೊಬ್ಬರವನ್ನು ರೈತರಿಗೆ ವಿತರಿಸುವಲ್ಲಿ ತೊಂದರೆಯಾಗಿತ್ತು. ಆದರೆ, ರಾಜ್ಯ ಸರ್ಕಾರ ಹಂತ ಹಂತವಾಗಿ ರಸಗೊಬ್ಬರ ಪೂರೈಕೆ ಮಾಡುವ ಮೂಲಕ ಗೊಂದಲ ನಿವಾರಣೆಗೆ ಮುಂದಾಗಿದೆ ಎಂದರು.
ಮದ್ದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಸಿಸಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಅಂತೆಯೇ ಹುಲಿಕೆರೆ ಗ್ರಾಮದಲ್ಲಿ ಬಹಳ ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದಿರಲಿಲ್ಲ, ಅದನ್ನರಿತು ಈ ಗ್ರಾಮದಲ್ಲಿ ರಸ್ತೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕೆಲಸಗಳು ಆಗಲು ಗಮನ ನೀಡಲಾಗುತ್ತಿದೆ ಎಂದರು.
ಇದೇ ವೇಳೆ ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಗ್ರಾ.ಪಂ ಅಧ್ಯಕ್ಷ ಕೆಂಪರಾಜು, ಸದಸ್ಯರಾದ ಮಾದೇಶ್, ಸುಂದ್ರಮ್ಮ, ತಾಲೂಕು ಎಸ್ಸಿ ಘಟಕದ ಅಧ್ಯಕ್ಷ ಮಹದೇವಪ್ಪ, ಮಹೇಶ್, ಪುಟ್ಟಸ್ವಾಮಿ, ಹೊನ್ನಲಗೆರೆ ಸ್ವಾಮಿ, ಸಿದ್ದರಾಜು, ಬೋರಯ್ಯ, ಶ್ರೀನಿವಾಸ್ ಗೌಡ, ಚಿದಂಬರಂ ಮೂರ್ತಿ, ರಾಜೇಂದ್ರ ಲೋಕೋಪಯೋಗಿ ಇಲಾಖೆ ಎಇಇ ದೇವಾನಂದ್, ಎಇ ಹನುಮಂತು ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ