ಮಂಡ್ಯ : ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ತೊರೆದಿದ್ದಾರೆ. ಶಾಲೆಯ ಬಳಿ ದೇವಸ್ಥಾನ ಇರುವುದರಿಂದ ಮೊಟ್ಟೆ ವಿತರಣೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವು ಪೋಷಕರು ಮೊಟ್ಟೆ ವಿತರಣೆಗೆ ಆಗ್ರಹಿಸಿದ್ದರೂ, ಹೆಚ್ಚಿನವರು ತಮ್ಮ ಧಾರ್ಮಿಕ ಭಾವನೆಗಳನ್ನು ಉಲ್ಲೇಖಿಸಿ ವಿರೋಧ ವ್ಯಕ್ತಪಡಿಸಿದ್ದಾರೆ.
ಹೌದು ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಹೆಚ್ಚಿನ ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವೇ ಸಂಖ್ಯೆಯ ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆ ಮೊಟ್ಟೆ ವಿತರಣೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಮಕ್ಕಳು ಸಾಮೂಹಿಕವಾಗಿ ಶಾಲೆ ತೊರದಿದ್ದಾರೆ. ಶಾಲೆಯಲ್ಲಿ ಒಟ್ಟಾರೆಯಾಗಿ 124 ಮಕ್ಕಳು ಓದುತ್ತಿದ್ದು ಆ ಪೈಕಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಶಾಲೆ ತೊರೆದಿದ್ದಾರೆ.
ಶಾಲೆ ಬಳಿ ವೀರಭದ್ರೇಶ್ವರ ಸ್ವಾಮಿ ದೇಗುಲ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಾಹಾರ, ಮೊಟ್ಟೆಯನ್ನು ಸ್ಥಳೀಯರ ಇಚ್ಛೆಯಂತೆ ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಕಾರಣಕ್ಕೆ ಶಾಲೆಯಲ್ಲಿ ಕೂಡ ಮೊಟ್ಟೆ ವಿತರಿಸದಿರಲು ಎಸ್ಡಿಎಂಸಿ ನಿರ್ಧರಿಸಿತ್ತು. ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಧಾರ್ಮಿಕ ಭಾವನೆಗೆ ಬೆಲೆ ಸಿಗದ ಜಾಗದಲ್ಲಿ ಓದುವುದು ಬೇಡ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.