ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಹೋಬಳಿ ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಿದ್ದೇನೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತಗಳಿಕೆ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ಕೊಪ್ಪ ಹೋಬಳಿಯ ಮೂಡ್ಯ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ವೇಳೆ ಮುಖಂಡರೊಂದಿಗೆ ಮಾತುಕತೆ ನಡೆಸಿದ ಸಚಿವರು ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯ ಅಭಿವೃದ್ಧಿಗೆ ನಾನು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುತ್ತಿದ್ದೇನೆ. ಆದರೆ, ಚುನಾವಣೆಯಲ್ಲಿ ಮಾತ್ರ ನನಗೆ ಈ ಭಾಗದಿಂದ ಮತಗಳು ನನ್ನ ನಿರೀಕ್ಷೆಗೆ ತಕ್ಕಂತೆ ಬರುತ್ತಿಲ್ಲ ಎಂದು ಮುಖಂಡರೊಂದಿಗೆ ವ್ಯಥೆಪಟ್ಟರು.
ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 2 ವರ್ಷಗಳಲ್ಲೇ ನಾಗಮಂಗಲ ವಿಧಾನ ಸಭಾ ಕ್ಷೇತ್ರದಲ್ಲಿ 1200 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಲ್ಲಿ
ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ಧಿಗೆ ನೀರಾವರಿ ಯೋಜನೆ ಕುಡಿಯುವ ನೀರು, ರಸ್ತೆ ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ
ಈಗಾಗಲೇ 500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿ ಪಡಿಸಿದ್ದೇನೆ ಎಂದರು.
ಕೊಪ್ಪ ಗ್ರಾಮವನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಚುನಾವಣಾ ಪೂರ್ವದಲ್ಲಿ ಜನತೆಗೆ ವಾಗ್ದಾನ ನೀಡಲಾಗಿತ್ತು. ಹೀಗಾಗಿ ಕೊಪ್ಪ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸುವುದೊ ಅಥವಾ ಗ್ರಾಮ ಪಂಚಾಯಿತಿಯನ್ನಾಗಿಯೇ ಉಳಿಸಿಕೊಳ್ಳುವುದೋ ಎಂದು ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನತೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಮನವರಿಕೆ ಮಾಡಿಕೊಟ್ಟು ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.
ಇನ್ನು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಲಿದ್ದಾರೆ ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಣೆ ಮಾಡಲಾಗಿದೆ. ಆದರೆ, ಇದಕ್ಕೆ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಚಲುವರಾಯಸ್ವಾಮಿ ಭಾರತ ಜಾತ್ಯಾತೀತ ರಾಷ್ಟ್ರ. ಸಾಹಿತ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿರುವವರನ್ನು ಗುರುತಿಸಿ ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಪರಂಪರೆ. ಈ ಹಿಂದೆಯೂ ಖ್ಯಾತ ಸಾಹಿತಿಗಳಾದ ಕೆ.ಎಸ್.ನಿಸಾರ್ ಅಹಮದ್ ಅವರಿಂದ ದಸರಾ ಉದ್ಘಾಟನೆ ಮಾಡಿಸಲಾಗಿದೆ. ಇಲ್ಲಿ ಜಾತಿ ಮುಖ್ಯವಲ್ಲ ಸಾಧನೆ ಮುಖ್ಯ. ಇಂತಹ ಕಾರ್ಯಗಳಲ್ಲಿಯೂ ಜಾತಿ ತರುವುದು ಶೋಭೆಯಲ್ಲ ಎಂದರು.
ಈ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ. ಜೋಗಿಗೌಡ, ಮನ್ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ಗ್ರಾ.ಪಂ ಅಧ್ಯಕ್ಷ ಸಂತೋಷ್ ಕೊಟ್ಟಿಗೆಯಾರ್ ಸದಸ್ಯರಾದ ರುದ್ರೇಶ್, ಗಿರೀಶ್, ಪರ್ವೆಜ್ ಅಹಮದ್, ಸಾವಿತ್ರಿ ಸುರೇಶ್, ಸುಧಾ ರಾಮು, ಕೆ.ಲಿಂಗರಾಜು, ಮುಖಂಡರಾದ ಕೆ.ಜಿ.ಕೃಷ್ಣೇಗೌಡ, ಗಟ್ಟಹಳ್ಳಿ ಹರೀಶ್, ಕೆ.ರಮೇಶ್ ಗೌಡ, ಎಂ.ಎಸ್ ಬೋರಲಿಂಗಯ್ಯ ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಧರ್ಮಸ್ಥಳವನ್ನು ಕಾಂಗ್ರೆಸ್ ಸರ್ಕಾರ ಕಳಂಕ ಮುಕ್ತ ಮಾಡಿದೆ: ಸಚಿವ ಎನ್.ಚಲುವರಾಯಸ್ವಾಮಿ