ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸರ್ಕಾರದಿಂದ ವಯೋಮಿತಿ 3 ವರ್ಷಗಳು ಸಡಿಲಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ನೇಮಕಾತಿಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಮೂರು ವರ್ಷ ವಯೋಮಿತಿಯನ್ನು ಎಲ್ಲಾ ವರ್ಗದವರಿಗೆ ಸಡಿಲಿಸಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದಿನಾಂಕ25.11.2024ರ, ದಿನಾಂಕ 29.03.2025ರ ಮತ್ತು ದಿನಾಂಕ 11.04.2025ರ ಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ದಿನಾಂಕ: 28-10-2024 ರಿಂದ ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿರುತ್ತದೆ ಎಂದಿದೆ.
ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ- ಎ ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ. ಮುಂದುವರೆದು, ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತದೆ.
ದಿನಾಂಕ:6.09.2025ರ ಆದೇಶದಲ್ಲಿ, ಆದೇಶವನ್ನು ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.
ನಂತರದಲ್ಲಿ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮೇಲೆ (3) ರಲ್ಲಿ ಓದಲಾದ ದಿನಾಂಕ: 06.09.2025ರ ಆದೇಶವನ್ನು ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..