ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.
ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.
ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು.
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಗೆ ರಾಜ್ಯ ಸಕಾರದ ಎಲ್ಲಾ ಅಧಿಕಾರಿ/ನೌಕರರು ನೋಂದಣಿ ಮಾಡಿಕೊಳ್ಳಲು ಕ್ರಮವಹಿಸುವುದು.
ಈ ಮೇಲಿನ ಅಂಶಗಳನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಮತ್ತು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯ ಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ಈ ದಾಖಲೆಗಳು ಕಡ್ಡಾಯ
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಬೇಕಾಗಿದೆ.
1.ಸರ್ಕಾರಿ ನೌಕರನ ಹಾಗೂ ಕುಟುಂಬದ ಅರ್ಹ ಸದಸ್ಯರ ಭಾವಚಿತ್ರ – ಪ್ರತಿಯೊಬ್ಬರ ಭಾವಚಿತ್ರವನ್ನು ಪ್ರತ್ಯೇಕವಾಗಿ ನೀಡಬೇಕು. ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವಚಿತ್ರ ಒದಗಿಸಬೇಕು.
2.ಜನ್ಮ ದಿನಾಂಕ ದಾಖಲೆಗಳು
3.ಆಧಾರ್ ಕಾರ್ಡ್ ಗಳು
4.ವೇತನ ಚೀಟಿಗಳು
5.ಕಾನೂನು ದಾಖಲೆಗಳು ಅಂದರೆ ದತ್ತು ವಿವಾಹ ಇತ್ಯಾದಿ ಸಂದರ್ಭಗಳಲ್ಲಿ.