ಬೆಂಗಳೂರು: 2026ರ ಮಾರ್ಚ್/ಏಪ್ರಿಲ್ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಣಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ‘ಶಾಲಾ ವಿದ್ಯಾರ್ಥಿ’ಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಶಾಲೆಗಳ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಮಾಡುವಂತೆ ತಿಳಿಸಿದೆ. ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ 710 ರೂ. ಶುಲ್ಕ ನಿಗದಿಪಡಿಸಲಾಗಿದೆ. ಬಾಲಕಿಯರು, ಪರಿಶಿಷ್ಟರು, ಆದಾಯಮಿತಿಗೆ ಒಳಪಟ್ಟು ವಿವಿಧ ಪ್ರವರ್ಗಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗಲು ಶೇ.75 ಹಾಜರಾತಿ ಹೊಂದಿರುವುದು ಕಡ್ಡಾಯವಾಗಿದೆ.
2026ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2026ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF) ವಿವರಗಳನ್ನು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್ ಲೋಡ್ ಮಾಡಲು ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ನೋಂದಣಿಗೆ ಅಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ನಿಗಧಿಪಡಿಸಿದ ದಿನಾಂಕದಲ್ಲಿ ಶಾಲಾ ಲಾಗಿನ್ನಲ್ಲಿ ವಿದ್ಯಾರ್ಥಿಗಳ ನೋಂದಣಿಯನ್ನು ಮಾಡುವುದು.
ಈ ಸಾಲಿನಿಂದ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಯನ್ನು ನೇರವಾಗಿ ಅಭ್ಯರ್ಥಿಗಳೇ ಮಂಡಲಿ ಜಾಲತಾಣದಲ್ಲಿ ನೋಂದಾಯಿಸಬಹುದಾಗಿದ್ದು, ಈ ಕುರಿತ ಮಾರ್ಗಸೂಚಿಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.
1. ಆಡಳಿತ ವಿಭಾಗ
ಖಾಸಗಿ ಪ್ರೌಢಶಾಲೆಗಳ ನೋಂದಣಿ ಮತ್ತು ಮಾನ್ಯತೆ :-
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ- 1966 Chapter VI -ನಿಯಮ 36 ಮತ್ತು 37ರನ್ವಯ ಮಾನ್ಯತೆ ಪಡೆದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಾತ್ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿರುತ್ತದೆ.
ಕರ್ನಾಟಕ ಶಿಕ್ಷಣ ಕಾಯ್ದೆ-1983 ನಿಯಮ-30, 31, 33, 36 ಹಾಗೂ 38 ರನ್ವಯ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳು ನೋಂದಣಿ ಮತ್ತು ಮಾನ್ಯತೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಹಾಗೂ ಪ್ರೌಢಶಾಲೆಯಲ್ಲಿ ಬೋಧನೆ ಮಾಡುವ ಮಾಧ್ಯಮಗಳಿಗನುಗುಣವಾಗಿ ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆಯು ನವೀಕರಣವಾಗಿರಬೇಕು. 2025-26ನೇ ಸಾಲಿನ ಮಾನ್ಯತೆ ನವೀಕರಣವನ್ನು ಸಕ್ಷಮ ಪ್ರಾಧಿಕಾರದಿಂದ ಸಕಾಲದಲ್ಲಿ ಪಡೆದುಕೊಳ್ಳುವುದು.